ಬೆಂಗಳೂರು: ಆರ್ಸಿಬಿ ತಂಡ ಐಪಿಎಲ್ 2026 ಫೈನಲ್ನಲ್ಲಿ ಭರ್ಜರಿ ಜಯ ಸಾಧಿಸಿ ಸತತ ಎರಡನೇ ಬಾರಿಗೆ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಿಜಯೋತ್ಸವ ಸಂಭ್ರಮಾಚರಣೆ ತೀವ್ರಗೊಂಡಿದೆ. ಆದರೆ ಈ ಸಂಭ್ರಮದ ನಡುವೆ ಸಂಚಾರಿ ಪೊಲೀಸರು ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಿದ್ದಾರೆ.
ನಗರದ ವಿವಿಧ ಭಾಗಗಳಲ್ಲಿ ನಡೆದ ತಪಾಸಣೆಯಲ್ಲಿ ಒಂದೇ ರಾತ್ರಿ 260 ಡ್ರಂಕ್ & ಡ್ರೈವ್ ಪ್ರಕರಣಗಳು ದಾಖಲಾಗಿರುವುದು ಪೊಲೀಸ್ ಇಲಾಖೆ ದೃಢಪಡಿಸಿದೆ. ವಿಜಯೋತ್ಸವದ ಸಂದರ್ಭದಲ್ಲೇ ವಾಹನ ಚಾಲನೆ ವೇಳೆ ಮದ್ಯಪಾನ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ಆರ್ಸಿಬಿ ಗೆಲುವಿನ ನಂತರ ಅಭಿಮಾನಿಗಳು ಬೈಕ್ ರ್ಯಾಲಿ ನಡೆಸಿ, ರಸ್ತೆಗಳಲ್ಲೇ ಜಯಘೋಷ ಕೂಗಿ ಸಂಭ್ರಮಿಸಿದ್ದಾರೆ. ಹಲವೆಡೆ ಪಟಾಕಿ ಸಿಡಿಸಿ ಉತ್ಸಾಹಭರಿತ ಆಚರಣೆ ನಡೆದಿದ್ದು, ಕೆಲ ಪ್ರದೇಶಗಳಲ್ಲಿ ಟ್ರಾಫಿಕ್ ಗೊಂದಲವೂ ಉಂಟಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಫೈನಲ್ ಪಂದ್ಯ ದಿನ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನಗರದ ಪ್ರಮುಖ ಫ್ಲೈಓವರ್ಗಳನ್ನು ಬಂದ್ ಮಾಡುವಂತೆ ಸೂಚನೆ ನೀಡಲಾಗಿತ್ತು. ಆದರೂ ಸಂಭ್ರಮಾಚರಣೆ ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ತಪಾಸಣೆ ನಡೆಸಿದ್ದಾರೆ.
ಸದ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.



