ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ರೋಣ ಮತಕ್ಷೇತ್ರದ ಶಾಸಕ ಹಾಗೂ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಾತ್ಯಾತೀತ ನಾಯಕ ಜಿ.ಎಸ್. ಪಾಟೀಲ ಅವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ನರೇಗಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಪ್ಪ ಬೆಟಗೇರಿ ಆಗ್ರಹಿಸಿದರು.
ಪಟ್ಟಣದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಿ.ಎಸ್. ಪಾಟೀಲ ಅವರು ಕಳೆದ ನಾಲ್ಕೂವರೆ ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಪಕ್ಷ ಸಂಘಟನೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ” ಎಂದು ಹೇಳಿದರು.
“ಹೈಕಮಾಂಡ್ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಬಂದಿರುವ ಅವರ ಪಕ್ಷನಿಷ್ಠೆ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಕಾರ್ಯವೈಖರಿಯನ್ನು ಪರಿಗಣಿಸಿ ಈ ಬಾರಿ ಸಚಿವ ಸ್ಥಾನ ನೀಡಬೇಕು” ಎಂದು ಒತ್ತಾಯಿಸಿದರು.
“ಈ ಬಾರಿಯೂ ಅವಕಾಶ ತಪ್ಪಿದರೆ ಹೋರಾಟ”
“ಪ್ರತಿ ಬಾರಿ ಸಚಿವ ಸ್ಥಾನದಿಂದ ವಂಚಿತರಾಗುತ್ತಿರುವುದು ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿಸಿದೆ. ಈ ಬಾರಿಯೂ ಸಚಿವ ಸ್ಥಾನ ಕೈತಪ್ಪಿದರೆ ಕಾರ್ಯಕರ್ತರು ಹೋರಾಟಕ್ಕೆ ಇಳಿಯಬೇಕಾಗುತ್ತದೆ” ಎಂದು ಶರಣಪ್ಪ ಬೆಟಗೇರಿ ಎಚ್ಚರಿಸಿದರು.
“ಐವತ್ತು ವರ್ಷಗಳ ಬಳಿಕ ಅವಕಾಶ”
ಮುಖಂಡ ಅಲ್ಲಾಬಕ್ಷಿ ನದಾಫ್ ಮಾತನಾಡಿ, “ಕಾಂಗ್ರೆಸ್ ಪಕ್ಷದಿಂದ ದೊಡ್ಡಮೇಟಿ ಅವರನ್ನು ಹೊರತುಪಡಿಸಿದರೆ ಕಳೆದ ಐವತ್ತು ವರ್ಷಗಳಲ್ಲಿ ಜಿಲ್ಲೆಯ ಬೇರೆ ಯಾರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ಆ ಅವಕಾಶ ಜಿ.ಎಸ್. ಪಾಟೀಲರಿಗೆ ದೊರಕಬೇಕು” ಎಂದು ಹೇಳಿದರು.
“ಗದಗ ಜಿಲ್ಲೆಯ ಹಿರಿಯ ರಾಜಕಾರಣಿಯಾಗಿರುವ, ನಾಲ್ಕು ಬಾರಿ ಶಾಸಕರಾಗಿರುವ ಜಿ.ಎಸ್. ಪಾಟೀಲರಿಗೆ ಪದೇಪದೇ ಸಚಿವ ಸ್ಥಾನ ಕೈತಪ್ಪುತ್ತಿರುವುದು ಕಾರ್ಯಕರ್ತರಲ್ಲಿ ಬೇಸರ ಮೂಡಿಸಿದೆ” ಎಂದರು.
ಮುಖಂಡ ನಿಂಗನಗೌಡ ಲಕ್ಕನಗೌಡ್ರ ಮಾತನಾಡಿ, “ಈ ಹಿಂದೆ ರೋಣಕ್ಕೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರೇ ಜಿ.ಎಸ್. ಪಾಟೀಲರಿಗೆ ಸಚಿವರಾಗುವ ಎಲ್ಲ ಅರ್ಹತೆಗಳಿವೆ ಎಂದು ಹೇಳಿದ್ದರು. ಈಗ ಆ ಮಾತನ್ನು ನಿಜ ಮಾಡುವ ಸಮಯ ಬಂದಿದೆ” ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮುಖಂಡ ಸಂತೋಷ ಮಣ್ಣೊಡ್ಡರ ಉಪಸ್ಥಿತರಿದ್ದರು.
“ಪಕ್ಷನಿಷ್ಠೆ, ಅಭಿವೃದ್ಧಿ ಕಾರ್ಯ ಹಾಗೂ ಜನಪರ ರಾಜಕಾರಣಕ್ಕೆ ಈ ಬಾರಿ ಸಚಿವ ಸ್ಥಾನ ರೂಪದಲ್ಲಿ ನ್ಯಾಯ ಸಿಗಬೇಕು.”ಶರಣಪ್ಪ ಬೆಟಗೇರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ



