ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ರಾಜ್ಯದ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ವಾಲ್ಮೀಕಿ ನಾಯಕ ಸಮುದಾಯದ ನಾಯಕರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಆದ್ಯತೆ ನೀಡಬೇಕು ಎಂದು ಹಗರಿಬೊಮ್ಮನಹಳ್ಳಿ ತಾಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಪವಾಡಿ ಹನುಮಂತಪ್ಪ ಆಗ್ರಹಿಸಿದರು.
ಈ ಕುರಿತು ಹೇಳಿಕೆ ನೀಡಿದ ಅವರು, “ಸಿದ್ದರಾಮಯ್ಯ ಅವರು ಎಂಟು ವರ್ಷಗಳ ಸುದೀರ್ಘ ಅವಧಿಯಲ್ಲಿ ಮುಖ್ಯಮಂತ್ರಿ ಆಗಿ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದು ಯಶಸ್ವಿಯಾಗಿ ಆಡಳಿತ ನಡೆಸಿದ್ದಾರೆ. ಇದೀಗ ಶಾಂತಿಯುತವಾಗಿ ಡಿ. ಕೆ. ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡುವ ಮೂಲಕ ಜನರ ಮನ ಗೆದ್ದಿದ್ದಾರೆ” ಎಂದು ಹೇಳಿದರು.
“ಡಿ. ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಹೊರಹೊಮ್ಮಿದ್ದು, ಶೀಘ್ರದಲ್ಲೇ ಮುಖ್ಯಮಂತ್ರಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ನಾಯಕ ಜನಾಂಗ ಹಾಗೂ ಪರಿಶಿಷ್ಟ ಪಂಗಡದ ನಾಯಕರಿಗೆ ಸಚಿವ ಸಂಪುಟದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು” ಎಂದು ಒತ್ತಾಯಿಸಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಸತೀಶ್ ಜಾರಕಿಹೊಳಿ ಅವರಿಗೆ ನೀಡಬೇಕು. ಜೊತೆಗೆ ಕೆ. ಎನ್. ರಾಜಣ್ಣ, ನಾಗೇಂದ್ರ, ಜೆ. ಗಣೇಶ್, ಅನ್ನಪೂರ್ಣ ತುಕಾರಾಂ ಸೇರಿದಂತೆ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಅವರು ಆಗ್ರಹಿಸಿದರು.
“ನಾಯಕ ಜನಾಂಗ ರಾಜ್ಯ ರಾಜಕೀಯ ಪ್ರಕ್ರಿಯೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ರಾಜಕೀಯ ಕ್ಷೇತ್ರಕ್ಕೆ ಅಮೋಘ ಕೊಡುಗೆ ನೀಡಿದೆ. ಹೀಗಾಗಿ ಡಿ. ಕೆ. ಶಿವಕುಮಾರ್ ಅವರು ನಮ್ಮ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು” ಎಂದು ಹೇಳಿದರು.
ಈ ಸಂದರ್ಭದಲ್ಲಿ ಚಿಂತರಪಳ್ಳಿ ದೇವೇಂದ್ರ, ಸೆರೆಗಾರ ಹುಚ್ಚಪ್ಪ, ವಿ.ಎಸ್.ಎಸ್.ಎನ್ ಅಧ್ಯಕ್ಷ ದಾದಮ್ಮನವರ ಬಸವರಾಜ, ಡಿಶ್ ಮಂಜುನಾಥ, ಚಿಗರಿ ಮಾರುತಿ, ಕಟಗಿ ಮಂಜುನಾಥ್, ದಾದಮ್ಮನವರ ರಾಜಪ್ಪ, ಕಾಟರ್ ಗಾಳೆಪ್ಪ, ಅರಸಿಕೆರೆ ಹನುಮಂತಪ್ಪ, ಬಡಲಡಕಿ ಕಿಟ್ಟಪ್ಪ, ಚಿಗರಿ ಪರಶುರಾಮ್, ವಿರುಪಾಕ್ಷಿ ಲೆಕ್ಕಪ್ಪನವರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.



