ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಐತಿಹಾಸಿಕ ಕರೇವಾಡಿ ಮಠದ ಉತ್ತರಾಧಿಕಾರಿಗಳಾದ ಡಾ. ಮಂಜುನಾಥಯ್ಯ ದೇವರು ಲೋಕ ಕಲ್ಯಾಣ, ಉತ್ತಮ ಮಳೆ-ಬೆಳೆ ಹಾಗೂ ಜನರಿಗೆ ಶಾಂತಿ ಮತ್ತು ಸಮೃದ್ಧಿ ದೊರೆಯಲೆಂದು ಜೂನ್ 1ರಿಂದ 3ರವರೆಗೆ ಮೌನಾನುಷ್ಠಾನ ಕೈಗೊಂಡಿದ್ದಾರೆ.
ಪಟ್ಟಣದ ಹಳ್ಳದಕೇರಿ ಓಣಿಯ ಗುಂಜಳ ರಸ್ತೆಯ ಸಾಲಾವಳಿ ಬಸವೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಈ ಮೌನಾನುಷ್ಠಾನಕ್ಕೆ ಭಕ್ತರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ನಿತ್ಯ ಇಷ್ಟಲಿಂಗ ಮಹಾಪೂಜೆ, ರುದ್ರಾಭಿಷೇಕ ಹಾಗೂ ಪ್ರಸಾದ ಸೇವೆ ನಡೆಯುತ್ತಿದೆ.
ಮೌನಾನುಷ್ಠಾನದ ಮಂಗಲ ಸಮಾರಂಭದ ಅಂಗವಾಗಿ ಜೂನ್ 3ರಂದು ಸಂಜೆ 5 ಗಂಟೆಗೆ ಧರ್ಮಸಭೆ ಆಯೋಜಿಸಲಾಗಿದೆ. ಧರ್ಮಸಭೆಯ ಸಾನಿಧ್ಯವನ್ನು ಶ್ರೀಮಠದ ಮಳೆಮಲ್ಲಿಕಾರ್ಜುನ ಶಿವಾಚಾರ್ಯರು, ಗಂಜಿಗಟ್ಟಿಯ ಶ್ರೀ ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗೂ ಹೂವಿನಶಿಗ್ಲಿ ವಿರಕ್ತಮಠದ ಶ್ರೀ ಚನ್ನವೀರ ಸ್ವಾಮೀಜಿ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಪೂಜ್ಯರು, ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಠದ ಕಮಿಟಿ ತಿಳಿಸಿದೆ.



