ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ ನಂತರ ಭಾವನಾತ್ಮಕವಾಗಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.
ನನ್ನ ಬದುಕಿನ ಪ್ರತಿಯೊಂದು ಏಳುಬೀಳುಗಳಲ್ಲಿಯೂ ಧೈರ್ಯ ತುಂಬಿ ಬೆನ್ನಿಗೆ ನಿಂತಿರುವ ಕೋಟ್ಯಂತರ ಜನತೆ ಹಾಗೂ ಕಾರ್ಯಕರ್ತರ ಆಶೀರ್ವಾದದಿಂದ ನಾನು ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೇನೆ. ಈ ಕ್ಷಣದಲ್ಲಿ ನನ್ನ ಮೇಲೆ ತೋರಿದ ಅಪಾರ ಪ್ರೀತಿ ಮತ್ತು ವಿಶ್ವಾಸಕ್ಕೆ ತಲೆಬಾಗುತ್ತೇನೆ ಎಂದು ಸಿಎಂ ಡಿಕೆಶಿ ಭಾವುಕರಾಗಿ ಹೇಳಿದ್ದಾರೆ.
ಮುಖ್ಯಮಂತ್ರಿಯ ಜವಾಬ್ದಾರಿ ನನ್ನ ಹೆಗಲ ಮೇಲೆ ಬಂದಿರುವುದು ಕೇವಲ ಅಧಿಕಾರವಲ್ಲ, ಅದು ಕನ್ನಡಿಗರ ಕನಸುಗಳನ್ನು ಸಾಕಾರಗೊಳಿಸುವ ಪವಿತ್ರ ಕರ್ತವ್ಯವಾಗಿದೆ. ಈ ಅವಕಾಶ ನೀಡಿದ ಹಿರಿಯ ನಾಯಕರು, ಮಾರ್ಗದರ್ಶಕರು ಹಾಗೂ ಸದಾ ಬೆನ್ನಿಗೆ ನಿಂತಿರುವ ಪ್ರತಿಯೊಬ್ಬರಿಗೂ ಅವರು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.
ಇಂದಿನ ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನ ಯುಗದಲ್ಲಿ ಹೊಸ ಚಿಂತನೆಗಳು ಮತ್ತು ನವೀನ ಆಲೋಚನೆಗಳೊಂದಿಗೆ ಕರ್ನಾಟಕವನ್ನು ಅಭಿವೃದ್ಧಿಯ ಅತ್ಯುನ್ನತ ಶಿಖರಕ್ಕೆ ಕೊಂಡೊಯ್ಯಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಸಮಗ್ರ ಅಭಿವೃದ್ಧಿಯ ದಾರಿಯಲ್ಲಿ ರೈತರು, ಶ್ರಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು ಹಾಗೂ ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವ ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದ್ದಾರೆ.
ಯಾವುದೇ ಒಬ್ಬ ವ್ಯಕ್ತಿಯಿಂದ ಬದಲಾವಣೆ ಸಾಧ್ಯವಿಲ್ಲ, ಆದರೆ ನಾವು ಎಲ್ಲರೂ ಒಟ್ಟಾಗಿ ಕೈಜೋಡಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಭವಿಷ್ಯದ ಪೀಳಿಗೆ ಹೆಮ್ಮೆಪಡುವಂತಹ ಸುಂದರ, ಸಮೃದ್ಧ ಮತ್ತು ಪ್ರಗತಿಪರ ಕರ್ನಾಟಕವನ್ನು ನಿರ್ಮಿಸುವುದೇ ನಮ್ಮ ಗುರಿ ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.



