ಬೆಂಗಳೂರು: ಕರ್ನಾಟಕದ ಕೆಪಿಸಿಸಿ ಅಧ್ಯಕ್ಷರಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತ ಆದೇಶದಲ್ಲಿ ತಿಳಿಸಿದ್ದಾರೆ.
ನಿರ್ಗಮಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸೇವೆ ಹಾಗೂ ಕೊಡುಗೆಗಳನ್ನು ಪಕ್ಷವು ಶ್ಲಾಘಿಸಿದೆ ಎಂದು ಎಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಪಕ್ಷ ಸ್ಮರಿಸಿದೆ.
ಇದಕ್ಕೂ ಮುನ್ನವೇ ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿತ್ತು. ಈ ಪಟ್ಟಿಯಲ್ಲಿ ಬಿ.ಕೆ. ಹರಿಪ್ರಸಾದ್, ಪಿ.ವಿ. ಮೋಹನ, ತಿಪ್ಪಣ್ಣ ಕಮಕನೂರು ಹಾಗೂ ಮಳವಳ್ಳಿ ಶಿವಣ್ಣ ಅವರಿಗೆ ಹೈಕಮಾಂಡ್ ಟಿಕೆಟ್ ಘೋಷಿಸಿದೆ. ಈ ಬೆಳವಣಿಗೆ ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ತಿರುವಾಗಿ ಪರಿಗಣಿಸಲಾಗಿದೆ.



