ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ ಲಿಂ. ವೀರಗಂಗಾಧರ ಜಗದ್ಗುರುಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಪೋಭೂಮಿ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಾಚರಣೆ ನಡೆಸಿದರು.
ಲಿಂ. ಜಗದ್ಗುರುಗಳ ಕರ್ತೃ ಗದ್ದುಗೆಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ ಹಾಗೂ ರಾಮಣ್ಣ ಲಮಾಣಿ, “ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಿದ ಡಿ.ಕೆ. ಶಿವಕುಮಾರ ಅವರಿಗೆ ಮುಖ್ಯಮಂತ್ರಿ ಸ್ಥಾನ ದೊರೆತಿರುವುದು ಸಂತಸದ ಸಂಗತಿ. ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಸುಭದ್ರ ಆಡಳಿತ ನಡೆಯಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಡಿ.ಕೆ. ಶಿವಕುಮಾರ ಅವರು ಪಕ್ಷದ ಸಂಕಷ್ಟದ ಸಮಯದಲ್ಲಿ ಬಂಡೆಯಂತೆ ನಿಂತು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅನೇಕ ರಾಜಕೀಯ ಸವಾಲುಗಳ ನಡುವೆಯೂ ಪಕ್ಷ ನಿಷ್ಠೆ ಮೆರೆದಿರುವುದು ಶ್ಲಾಘನೀಯ ಎಂದು ಹೇಳಿದರು.
ಲಿಂ. ವೀರಗಂಗಾಧರ ಶಿವಾಚಾರ್ಯ ಭಗವತ್ಪಾದರುಗಳ ಮೇಲೆ ಡಿ.ಕೆ.ಶಿ. ಅವರಿಗೆ ಅಪಾರ ಭಕ್ತಿ ಹಾಗೂ ನಂಬಿಕೆ ಇತ್ತು. ಇತ್ತೀಚೆಗೆ ಮುಕ್ತಿಮಂದಿರ ಧರ್ಮಕ್ಷೇತ್ರಕ್ಕೆ ಭೇಟಿ ನೀಡಿ, ಪ್ರಸ್ತುತ ಪಟ್ಟಾಧ್ಯಕ್ಷರಾದ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು. ಅದೇ ಆಶೀರ್ವಾದದ ಫಲವಾಗಿ ಅವರು ಮುಖ್ಯಮಂತ್ರಿ ಸ್ಥಾನಕ್ಕೇರಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಆರ್. ಕೊಪ್ಪದ, ನಗರ ಅಧ್ಯಕ್ಷ ಅಮರೇಶ ತೆಂಬದಮನಿ, ಜಯಕ್ಕ ಕಳ್ಳಿ, ಶರಣು ಗೋಡಿ, ಮುತ್ತಣ್ಣ ಗಡೆಪ್ಪನವರ, ಸುಭಾಸ ಓದುನವರ, ಸೋಮನಗೌಡ್ರ ಪಾಟೀಲ (ಎಲಿಬಳ್ಳಿ), ಬಸವರಾಜ ಓದುನವರ, ಪರಮೇಶ ಲಮಾಣಿ, ನಾಗರಾಜ ಚಿಂಚಲಿ, ಕಿರಣ ನವಲೆ, ಮೌನೇಶ ಬಾಲೇಹೊಸೂರು, ಬಸವರೆಡ್ಡಿ ಹನುಮರೆಡ್ಡಿ, ಜಯಣ್ಣ ಕಲಕೋಟಿ, ರಾಮಣ್ಣ ರಿತ್ತಿ, ಛಾಯಪ್ಪ ಬಸಾಪೂರ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
“ಲಿಂ. ಜಗದ್ಗುರುಗಳ ಆಶೀರ್ವಾದ ಮತ್ತು ಪಕ್ಷ ನಿಷ್ಠೆಯ ಫಲವಾಗಿ ಡಿ.ಕೆ. ಶಿವಕುಮಾರ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದಾರೆ.”
ಜಿ.ಎಸ್. ಗಡ್ಡದೇವರಮಠ
ಮಾಜಿ ಶಾಸಕ



