ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪುರಸಭೆ ವ್ಯಾಪ್ತಿಯ ಹೊಸ ಬಸ್ ನಿಲ್ದಾಣದ ಎದುರಿನ ವಾಣಿಜ್ಯ ಮಳಿಗೆಗಳ ಗುತ್ತಿಗೆ ಅವಧಿ ಮೂರು ವರ್ಷಗಳ ಹಿಂದೆಯೇ ಮುಕ್ತಾಯಗೊಂಡಿದ್ದರೂ ಹೊಸ ಟೆಂಡರ್ ಪ್ರಕ್ರಿಯೆ ಆರಂಭಿಸದಿರುವುದನ್ನು ಖಂಡಿಸಿ ಜಯ ಕರ್ನಾಟಕ ಸಂಘಟನೆ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ತಕ್ಷಣ ಹೊಸ ಟೆಂಡರ್ ಕರೆಯದಿದ್ದರೆ ಜೂನ್ 9ರಿಂದ ಪುರಸಭೆ ಮಳಿಗೆಗಳ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಜಯ ಕರ್ನಾಟಕ ಸಂಘಟನೆ ಶಿರಹಟ್ಟಿ-ಲಕ್ಷ್ಮೇಶ್ವರ ತಾಲೂಕು ಉಸ್ತುವಾರಿ ರಮೇಶ್ ಹಂಗನಕಟ್ಟಿ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾ ಅಧ್ಯಕ್ಷ ಬಸವರಾಜ ಹಿರೇಮನಿ ಎಚ್ಚರಿಕೆ ನೀಡಿದರು.
ಪುರಸಭೆ ವ್ಯವಸ್ಥಾಪಕಿ ಮಂಜುಳಾ ಹೂಗಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಹೊಸ ಬಸ್ ನಿಲ್ದಾಣದ ಎದುರಿನ 19 ವಾಣಿಜ್ಯ ಮಳಿಗೆಗಳ ಗುತ್ತಿಗೆ ಅವಧಿ 30-03-2023ರಂದು ಅಂತ್ಯಗೊಂಡಿದೆ. ಈ ಕುರಿತು ಈ ಹಿಂದೆಯೇ ಮನವಿ ಸಲ್ಲಿಸಲಾಗಿತ್ತು. ಅಂದಿನ ಮುಖ್ಯಾಧಿಕಾರಿಗಳು 15 ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರೂ, ಮೂರು ತಿಂಗಳು ಕಳೆದರೂ ಯಾವುದೇ ಕ್ರಮ ಜರುಗಿಲ್ಲ ಎಂದು ಆರೋಪಿಸಿದರು.
ಕೇವಲ ಅರ್ಜಿ ಸ್ವೀಕರಿಸಿರುವುದಾಗಿ ಹೇಳುವುದನ್ನು ಬಿಟ್ಟು ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗಿಲ್ಲ. ಹೊಸ ಟೆಂಡರ್ ಕರೆಯದೆ ವಿಳಂಬ ಮಾಡುತ್ತಿರುವುದು ಸಾರ್ವಜನಿಕರಲ್ಲಿ ಅನುಮಾನ ಹುಟ್ಟಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
2023ರಿಂದ 2026ರವರೆಗೆ ಪುರಸಭೆಯಲ್ಲಿ ಕಾರ್ಯನಿರ್ವಹಿಸಿದ ಮುಖ್ಯಾಧಿಕಾರಿಗಳ ಪಾತ್ರವನ್ನು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.
ಜೂನ್ 9ರಿಂದ ಪುರಸಭೆ ಮಳಿಗೆಗಳ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಸಂಘಟನೆಗಳು ಎಚ್ಚರಿಸಿವೆ.
ಬಳಿಕ ತಹಸೀಲ್ದಾರ ಧನಂಜಯ ಎಂ. ಹಾಗೂ ಪಿಎಸ್ಐ ನಾಗರಾಜ ಗಡದ ಅವರಿಗೆ ಸಹ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಭರಮಣ್ಣ ಶೇರಸೂರಿ, ಸುರೇಶ್ ಹಟ್ಟಿ, ಬಸಣ್ಣ ಮೆಲ್ಮುರಿ, ಮಂಜುನಾಥ ಮುಳಗುಂದ, ಮಹಾಂತೇಶ ಗುದ್ನಾಳ, ಮಹೇಶ್ ಸೂರಣಗಿ, ಸಂಜೀವ ಶೇರಸೂರಿ, ಮೈಲಾರಪ್ಪ ಹೆಗ್ಗಣವರ ಸೇರಿದಂತೆ ಎರಡೂ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
“ಪುರಸಭೆ ಮಳಿಗೆಗಳನ್ನು ಸುಪರ್ದಿಗೆ ಪಡೆದು ಹೊಸ ಟೆಂಡರ್ ಕರೆಯುವವರೆಗೆ ಹೋರಾಟ ಮುಂದುವರಿಯಲಿದೆ”
ಬಸವರಾಜ ಹಿರೇಮನಿ, ಜಿಲ್ಲಾ ಅಧ್ಯಕ್ಷರು



