ದಕ್ಷಿಣ ಕನ್ನಡ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಡಳಿತದ ಆರಂಭಿಕ ಹಂತ ಸವಾಲುಗಳಿಂದ ಕೂಡಿದ್ದು, ಪ್ರಸ್ತುತ ಅವರು ಮುಳ್ಳಿನ ಹಾಸಿಗೆಯಲ್ಲಿ ಮಲಗಿರುವಂತಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅಭಿಪ್ರಾಯಪಟ್ಟಿದ್ದಾರೆ.
ಪುತ್ತೂರಿನ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ವರ್ಷಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಭ್ರಷ್ಟಾಚಾರ, ಗುಂಪುಗಾರಿಕೆ, ಅಭಿವೃದ್ಧಿ ಕುಂಠಿತ ಹಾಗೂ ವಿವಿಧ ರೀತಿಯ ರಾಜಕೀಯ ಸವಾಲುಗಳನ್ನು ಕಂಡಿದ್ದೇವೆ ಎಂದು ಹೇಳಿದರು.
“ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅವಧಿ ಸುಗಮವಾಗಿರುತ್ತದೆ ಎಂಬ ಭಾವನೆ ನನಗಿಲ್ಲ. ಈಗಾಗಲೇ ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿರುವುದು ಸರ್ಕಾರದ ಒಳಗಿನ ಅಸಮಾಧಾನವನ್ನು ತೋರಿಸುತ್ತದೆ. ಈ ಬೆಳವಣಿಗೆಗಳನ್ನು ಗಮನಿಸಿದರೆ ಮುಖ್ಯಮಂತ್ರಿ ಮುಳ್ಳಿನ ಹಾಸಿಗೆಯಲ್ಲಿ ಮಲಗಿರುವಂತಿದೆ. ತಮ್ಮ ಗುರಿಗಳನ್ನು ಯಶಸ್ವಿಯಾಗಿ ಸಾಧಿಸಲು ಅವರು ಸಾಕಷ್ಟು ಸವಾಲುಗಳನ್ನು ಎದುರಿಸಬೇಕಾಗುತ್ತದೆ” ಎಂದು ಸದಾನಂದ ಗೌಡ ಹೇಳಿದರು.
ಇದೇ ವೇಳೆ, ಒಕ್ಕಲಿಗ ಸಮುದಾಯದ ವ್ಯಕ್ತಿಯೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗಿರುವುದು ಹೆಮ್ಮೆಯ ವಿಷಯವಾದರೂ, ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಅವರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುವುದು ಸುಲಭದ ಕೆಲಸವಲ್ಲ ಎಂದು ಅಭಿಪ್ರಾಯಪಟ್ಟರು.
ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ತಾವು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದರು.
ನಾನು ಸ್ಪರ್ಧೆಯ ರಾಜಕಾರಣದಲ್ಲಿಲ್ಲ. ರಾಜಕೀಯ ಜೀವನದ ಬಗ್ಗೆ ನನಗೆ ಸಂಪೂರ್ಣ ತೃಪ್ತಿ ಇದೆ. ರಾಜ್ಯಸಭೆ ಚುನಾವಣೆಯಲ್ಲಿ ನನ್ನ ಹೆಸರು ಚರ್ಚೆಗೆ ಬಂದಿರುವುದು ಸಂತೋಷದ ವಿಷಯ. ಆದರೆ ಯಾವುದೇ ರೀತಿಯ ಲಾಬಿ ಮಾಡುವ ಪ್ರಶ್ನೆಯೇ ಇಲ್ಲ. ಪಕ್ಷದ ರಾಷ್ಟ್ರೀಯ ನಾಯಕತ್ವ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ಕುರಿತು ಅಂತಿಮ ನಿರ್ಧಾರವನ್ನು ಪಕ್ಷದ ಕೇಂದ್ರ ನಾಯಕತ್ವವೇ ಕೈಗೊಳ್ಳಲಿದೆ ಎಂದು ತಿಳಿಸಿದರು.



