ವಿಜಯಸಾಕ್ಷಿ ಸುದ್ದಿ, ನರಗುಂದ: “ವಿಶ್ವ ಪರಿಸರ ದಿನವನ್ನು ಕೇವಲ ಆಚರಿಸಿದರೆ ಸಾಲದು. ಪರಿಸರ ಸಂರಕ್ಷಣೆಯನ್ನು ಪ್ರತಿಯೊಬ್ಬರೂ ಜೀವನದ ಅವಿಭಾಜ್ಯ ಅಂಗವನ್ನಾಗಿ ರೂಢಿಸಿಕೊಳ್ಳಬೇಕು. ಸಸಿ ನೆಡುವುದಷ್ಟೇ ಅಲ್ಲ, ಅದು ಮರವಾಗಿ ಬೆಳೆವವರೆಗೂ ಅದರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ನರಗುಂದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಹೇಳಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲೂಕಿನ ಬನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ಲಗೇರಿ ಗ್ರಾಮದಲ್ಲಿ ತಾಲೂಕು ಪಂಚಾಯಿತಿ ನರಗುಂದ ಹಾಗೂ ಬನಹಟ್ಟಿ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ಆವರಣದಲ್ಲಿ 10 ಸಸಿಗಳನ್ನು ನೆಟ್ಟು ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, “ಇಂದು ನೆಟ್ಟಿರುವ ಸಸಿಗಳು ಬೆಳೆದು ಗ್ರಾಮಸ್ಥರು ಹಾಗೂ ಪ್ರಾಣಿ-ಪಕ್ಷಿಗಳಿಗೆ ನೆರಳು ನೀಡುವವರೆಗೂ ಅವುಗಳ ಸಂರಕ್ಷಣೆಯಲ್ಲಿ ಸಾರ್ವಜನಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ” ಎಂದು ಹೇಳಿದರು.
ಗ್ರಾಮಗಳ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಹಾಗೂ ಅವುಗಳ ನಿರ್ವಹಣೆಯಲ್ಲಿಯೂ ಸಾರ್ವಜನಿಕರು ಗ್ರಾಮ ಪಂಚಾಯಿತಿಗೆ ಸಹಕಾರ ನೀಡಬೇಕು ಎಂದು ಕರೆ ನೀಡಿದರು.
ಈ ವೇಳೆ ಮಾತನಾಡಿದ ಬನಹಟ್ಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮಂಜುನಾಥ ಗಣಿ, “ಕುಡಿಯುವ ನೀರಿನ ಟ್ಯಾಂಕ್ ಆವರಣವನ್ನು ಸ್ವಚ್ಛಗೊಳಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಮನವಿ ಬಂದ 15 ದಿನಗಳೊಳಗೆ ಸ್ಥಳವನ್ನು ಸ್ವಚ್ಛಗೊಳಿಸಿ ಇಂದು ಅದೇ ಸ್ಥಳದಲ್ಲಿ ಪರಿಸರ ದಿನಾಚರಣೆ ನಡೆಸುತ್ತಿರುವುದು ಸಂತಸದ ಸಂಗತಿ” ಎಂದು ಹೇಳಿದರು.
ಗ್ರಾಮ ಪಂಚಾಯಿತಿ ವತಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಸಾರ್ವಜನಿಕರು ಕಾಪಾಡಿಕೊಂಡು ಹೋಗಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಡಿ. ಪೂಜಾರ, ನಾಗಯ್ಯ ಹಿರೇಮಠ, ವಿರುಪಾಕ್ಷಪ್ಪ ಶಾನವಾಡ, ಶಿವರುದ್ರಪ್ಪ ಸುಳ್ಳದ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮಾಳಪ್ಪ ಪೂಜಾರ, ಬಿಲ್ ಕಲೆಕ್ಟರ್ ಶಿವನಪ್ಪ ಕಲ್ಲಾಪೂರ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
“ಪರಿಸರ ದಿನವನ್ನು ಆಚರಿಸುವುದಷ್ಟೇ ಸಾಲದು. ನಾವು ಇಂದು ನೆಟ್ಟ ಸಸಿಗಳು ಮರವಾಗಿ ಬೆಳೆವವರೆಗೂ ಅವುಗಳ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.”
ಶ್ರೀಧರ್ ಚಿನಗುಂಡಿ, ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ ನರಗುಂದ



