ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಹೊಸ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಕಲಾಂ ನಗರ, ಇಂದಿರಾ ನಗರ ಹಾಗೂ ಬಸವೇಶ್ವರ ನಗರ ಪ್ರದೇಶಗಳು ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದು, ರಸ್ತೆ ಮತ್ತು ಚರಂಡಿಗಳಿಲ್ಲದೇ ನಿವಾಸಿಗಳು ಸಂಕಷ್ಟದ ಬದುಕು ನಡೆಸುವಂತಾಗಿದೆ.
ಮಳೆಯಾದರೆ ರಸ್ತೆಗಳು ಸಂಪೂರ್ಣ ಕೆಸರಿನ ಕೆರೆಯಾಗುತ್ತಿದ್ದು, ಸಂಚಾರ ದುಸ್ತರವಾಗುತ್ತಿದೆ. ಜೀವಭಯದಲ್ಲೇ ಜನರು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಮಾರು 25 ವರ್ಷಗಳಾದರೂ ಈ ಭಾಗದಲ್ಲಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ. ಪರಿಣಾಮ, ಮಳೆ ನೀರು ರಸ್ತೆಗಳಲ್ಲಿ ನಿಂತು ಕೊಳಚೆ ವಾತಾವರಣ ಸೃಷ್ಟಿಯಾಗಿದ್ದು, ನಿವಾಸಿಗಳ ಆರೋಗ್ಯಕ್ಕೂ ಅಪಾಯ ಎದುರಾಗಿದೆ.
ಈ ಪ್ರದೇಶದಲ್ಲೇ ಶ್ರವಣ ನ್ಯೂನತೆಯುಳ್ಳ ಮಕ್ಕಳ ಶಾಲೆ, ಮಹಿಳಾ ವಸತಿ ನಿಲಯ ಹಾಗೂ ಕಲಾಂ ಶಾಲೆ ಇರುವುದರಿಂದ ವಿದ್ಯಾರ್ಥಿಗಳು ಪ್ರತಿದಿನ ಪರದಾಡುತ್ತ ಸಂಚರಿಸುವಂತಾಗಿದೆ. ಪೇಪರ್, ಹಾಲು ಹಾಗೂ ತರಕಾರಿ ವಿತರಕರು ಸಹ ಕೆಸರು ರಸ್ತೆಯಲ್ಲಿ ಜಾರಿ ಬೀಳುವ ಭೀತಿಯಲ್ಲೇ ಕೆಲಸ ನಿರ್ವಹಿಸುತ್ತಿದ್ದಾರೆ.
ರಸ್ತೆ ದುರಸ್ತಿ ಹಾಗೂ ಮೂಲ ಸೌಲಭ್ಯ ಕಲ್ಪಿಸುವಂತೆ ಹಲವು ಬಾರಿ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಪುರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ನಿವಾಸಿಗಳು ಆರೋಪಿಸಿದ್ದಾರೆ.
ಸದ್ಯ ಕಲಾಂ ನಗರದ ರಸ್ತೆ ಪರಿಸ್ಥಿತಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ಕನ್ನಡಿಯಂತಿದ್ದು, ಸ್ಥಳೀಯರು ತ್ವರಿತ ಅಭಿವೃದ್ಧಿ ಕಾಮಗಾರಿಗೆ ಆಗ್ರಹಿಸಿದ್ದಾರೆ.



