ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯಲು ಸರ್ಕಾರ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.
ಮುಂದಿನ ತಿಂಗಳಿನಿಂದ ಹೊಸ ನಿಯಮ ಜಾರಿಗೆ ಬರಲಿದ್ದು, ಫಲಾನುಭವಿಗಳಿಗೆ ಬಯೋಮೆಟ್ರಿಕ್ ಕಡ್ಡಾಯವಾಗಲಿದೆ.
ಹೊಸ ನಿಯಮದ ಪ್ರಕಾರ, ಬಯೋಮೆಟ್ರಿಕ್ ಮಾಡಿಸದಿದ್ದರೆ ಪ್ರತಿ ತಿಂಗಳ 2,000 ರೂ. ಹಣ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ತಿಳಿದುಬಂದಿದೆ. ಬಯೋಮೆಟ್ರಿಕ್ ನೋಂದಣಿಗೆ ಫಲಾನುಭವಿಗಳು 5 ರೂ. ಶುಲ್ಕ ಪಾವತಿಸಬೇಕಾಗುತ್ತದೆ.
ಇದರ ಜೊತೆಗೆ ಗೃಹಲಕ್ಷ್ಮಿ ಸೊಸೈಟಿಗೆ ಸದಸ್ಯತ್ವ ಪಡೆಯುವ ವ್ಯವಸ್ಥೆಯನ್ನೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪರಿಚಯಿಸುತ್ತಿದ್ದು, ಸದಸ್ಯತ್ವ ಬಯಸುವವರು 1,250 ರೂ. ಪಾವತಿಸಬೇಕಾಗುತ್ತದೆ. ಆದರೆ ಸದಸ್ಯತ್ವ ಬೇಡ ಎಂದರೆ ಕೇವಲ ಬಯೋಮೆಟ್ರಿಕ್ ಮಾತ್ರ ಮಾಡಿಸಿಕೊಳ್ಳಬಹುದಾಗಿದೆ.
ಬಯೋಮೆಟ್ರಿಕ್ ಪ್ರಕ್ರಿಯೆ ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಸೇವಾಸಿಂಧು ಕೇಂದ್ರಗಳಲ್ಲಿ ನಡೆಯುವ ಸಾಧ್ಯತೆ ಇದೆ. ಒಂದು ಬಾರಿ ಬಯೋಮೆಟ್ರಿಕ್ ದಾಖಲಿಸಿದ ಬಳಿಕ ಫಲಾನುಭವಿಯ ಗುರುತಿನ ಆಧಾರದ ಮೇಲೆ ನೇರವಾಗಿ ಹಣ ಪಾವತಿ ಆಗಲಿದೆ.
ಬಯೋಮೆಟ್ರಿಕ್ ಮಾಡಲು ಫಲಾನುಭವಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



