ವಿಜಯಸಾಕ್ಷಿ ಸುದ್ದಿ, ಗದಗ: ಹಿಂದುಳಿದ ಗದಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿಯ ನಾಯಕತ್ವ ಅಗತ್ಯವಿದ್ದು, ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿರುವ ಹಿರಿಯ ನಾಯಕ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಜಿಲ್ಲಾ ಪೈಂಟರ್ಸ್ ಸಂಘದ ಅಧ್ಯಕ್ಷ ರಿಯಾಜ್ ಹೆಸರೂರು ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದ ಕಾರ್ಮಿಕ ವರ್ಗದ ನೆರವಿಗೆ ನಿಂತು ಮಾನವೀಯ ನಾಯಕತ್ವ ತೋರಿದ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವುದು ನ್ಯಾಯಸಮ್ಮತ ಎಂದು ಹೇಳಿದರು.
ರಾಜಕೀಯ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಎಚ್.ಕೆ. ಪಾಟೀಲ ಅವರು ಜಿಲ್ಲೆಯ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಅಂತಹ ಅನುಭವಿ ನಾಯಕರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಸಂಘದ ಮುಖಂಡರು ಆಗ್ರಹಿಸಿದರು.
ದಾವಲಸಾಬ್ ಮಕರಬ್ಬಿ ಮಾತನಾಡಿ, ಜಿಲ್ಲೆಯ ಸಮಸ್ಯೆಗಳ ಅರಿವು ಇರುವ ನಾಯಕರು ಸರ್ಕಾರದಲ್ಲಿ ಇದ್ದರೆ ಮಾತ್ರ ಅಭಿವೃದ್ಧಿಗೆ ವೇಗ ಸಿಗುತ್ತದೆ. ಆದ್ದರಿಂದ ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ವಿರೇಶ ಜುಂಜಾಲ, ಗೋಪಾಲ ಸಿಂಗ್ ರಜಪೂತ್, ಮಾರುತಿ ಕಾತರಕಿ, ದಾದಾಪೀರ ಕಟ್ಟಿಮನಿ, ಅಕ್ರಮ್ ಕುಂದಗೋಳ, ಸಲ್ಮಾನ್ ಬಬರ್ಚಿ, ಮಹಮ್ಮದ್ ರಫಿ, ಶರಣಪ್ಪ ಸೊರಟೂರು, ಇಬ್ರಾಹಿಂ ಇಲಕಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಗದಗ ಜಿಲ್ಲೆಯ ಅಭಿವೃದ್ಧಿಗೆ ಅನುಭವ ಹಾಗೂ ದೂರದೃಷ್ಟಿ ಹೊಂದಿರುವ ಎಚ್.ಕೆ. ಪಾಟೀಲರಂತಹ ನಾಯಕರು ಸರ್ಕಾರದಲ್ಲಿ ಇರಬೇಕು”
ರಿಯಾಜ್ ಹೆಸರೂರು



