ಕೋಲಾರ: ಸಾಲವಾಗಿ ಪಡೆದಿದ್ದ ಹಣವನ್ನು ಹಿಂತಿರುಗಿಸುವುದಾಗಿ ಹೇಳಿ ಕರೆಸಿಕೊಂಡು ವೃದ್ಧೆಯೊಬ್ಬರನ್ನು ಹತ್ಯೆಗೈದಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ನಡೆದ 25 ದಿನಗಳ ಬಳಿಕ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಪುರ ಗ್ರಾಮದ ರೆಡ್ಡಮ್ಮ (70) ಹತ್ಯೆಗೀಡಾದ ವೃದ್ಧೆ. ಇದೇ ಗ್ರಾಮದ ನಿವಾಸಿಗಳಾದ ತಿಮ್ಮರಾಜು ಹಾಗೂ ಮುನಿರಾಜು ಎಂಬುವರನ್ನು ಪ್ರಕರಣ ಸಂಬಂಧ ಪೊಲೀಸರು ಬಂಧಿಸಿದ್ದಾರೆ.
ಮೇ 17ರಂದು ರೆಡ್ಡಮ್ಮ ನಾಪತ್ತೆಯಾಗಿದ್ದರು. ಈ ಕುರಿತು ಕುಟುಂಬಸ್ಥರು ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಬಳಿಕ ಜೂನ್ 1ರಂದು ನಾಪತ್ತೆ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ರೆಡ್ಡಮ್ಮ ಅವರ ಮಗನಿಗೆ ಸಾಲ ನೀಡಿದ್ದ ತಿಮ್ಮರಾಜು ಮತ್ತು ಮುನಿರಾಜು ಅವರ ಮೇಲೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಇಬ್ಬರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ, ಸಾಲದ ಹಣ ನೀಡುವುದಾಗಿ ಹೇಳಿ ರೆಡ್ಡಮ್ಮರನ್ನು ಕರೆಸಿಕೊಂಡು ಹತ್ಯೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಹತ್ಯೆಯ ಬಳಿಕ ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಕೆಂಚಾರ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ಬಿಸಾಡಿರುವುದಾಗಿ ಮಾಹಿತಿ ನೀಡಿದ್ದಾರೆ.
ಆರೋಪಿಗಳ ಮಾಹಿತಿ ಆಧರಿಸಿ ಪೊಲೀಸರು ಅರಣ್ಯ ಪ್ರದೇಶದಲ್ಲಿ ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಸದ್ಯ ರಾಯಲಪಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.



