ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ರಾಜಕಾರಣದಲ್ಲಿ ಅಪಾರ ಅನುಭವ ಹೊಂದಿರುವ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಶಿವಪ್ಪ ಬಳ್ಳಾರಿ ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್.ಕೆ. ಪಾಟೀಲರು ಸಚಿವರಾಗಿದ್ದ ಅವಧಿಯಲ್ಲಿ ರೈತರ ಪರವಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಸಂಕಷ್ಟದ ಸಂದರ್ಭಗಳಲ್ಲಿ ಜನರ ಬೆನ್ನಿಗೆ ನಿಂತು ಕಾರ್ಯನಿರ್ವಹಿಸಿದ ನಾಯಕತ್ವ ಅವರದ್ದಾಗಿದೆ ಎಂದು ಹೇಳಿದರು.
ಗದಗ ಜಿಲ್ಲೆಗೆ ಗ್ರಾಮೀಣ ಪಂಚಾಯತ್ ವಿಶ್ವವಿದ್ಯಾಲಯ ಮಂಜೂರು ಮಾಡುವಲ್ಲಿ ಹಾಗೂ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿರುವುದನ್ನು ಸ್ಮರಿಸಿದ ಅವರು, ಗಡಿ ವಿವಾದದಂತಹ ಸೂಕ್ಷ್ಮ ವಿಷಯಗಳಲ್ಲೂ ಪಾಟೀಲರು ದೂರದೃಷ್ಟಿಯ ನಾಯಕತ್ವ ಪ್ರದರ್ಶಿಸಿದ್ದಾರೆ ಎಂದರು.
ಸಚಿವ ಸ್ಥಾನ ನೀಡದಿದ್ದರೆ ರಾಜೀನಾಮೆ ಎಚ್ಚರಿಕೆ
ವಾಲ್ಮೀಕಿ ಸಮಾಜದ ಮುಖಂಡ ಬಸವರಾಜ ಬೆಳದಡಿ ಮಾತನಾಡಿ, ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡದಿದ್ದರೆ ರಾಜ್ಯಾದ್ಯಂತ ಕಾಂಗ್ರೆಸ್ ಎಸ್ಟಿ ಘಟಕದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಎಚ್ಚರಿಸಿದರು.
ಪಕ್ಷ ಸಂಘಟನೆ ಹಾಗೂ ಆಡಳಿತಾತ್ಮಕ ಅನುಭವ ಹೊಂದಿರುವ ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡುವುದು ಗದಗ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಹಾಲಪ್ಪ ಮಾಲ್ಯಪ್ಪನವರ, ಬಸವರಾಜ ದಾವಣಗೇರಿ, ಮಂಜುನಾಥ ಬೆಳದಡಿ, ಕೃಷ್ಣಪ್ಪ ದೇವರಮನಿ, ರಾಮು ಬಾಗಲಕೋಟಿ, ಮುತ್ತುರಾಜ ಬಳಗಾನೂರು, ಸಚಿನ್ ನಿಂಬಣ್ಣನವರ, ಕಿರಣ ನಾಯ್ಕರ, ದತ್ತು ಬೆಳದಡಿ, ನಾಗರಾಜ ಕುರುಗೋಡು ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಎಚ್.ಕೆ. ಪಾಟೀಲರು ರೈತರು, ಬಡವರು ಹಾಗೂ ಜನಸಾಮಾನ್ಯರ ಪರವಾಗಿ ಹೋರಾಟ ನಡೆಸಿದ ನಾಯಕರು. ಅವರ ಸೇವೆ ಮತ್ತು ಸಾಧನೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು.”
ಶಿವಪ್ಪ ಬಳ್ಳಾರಿ
ಜಿಲ್ಲಾಧ್ಯಕ್ಷರು, ಕಾಂಗ್ರೆಸ್ ಎಸ್ಟಿ ಘಟಕ



