HomeGadag Newsಭೂತಾನ್‌ನಲ್ಲಿ ಭಾರತದ ಧ್ವಜ ಹಾರಿಸಿದ ಗದಗದ ಪ್ರತಿಭೆಗಳು

ಭೂತಾನ್‌ನಲ್ಲಿ ಭಾರತದ ಧ್ವಜ ಹಾರಿಸಿದ ಗದಗದ ಪ್ರತಿಭೆಗಳು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಭೂತಾನ್‌ನಲ್ಲಿ ನಡೆದ ಏಷ್ಯನ್ ಆಟ್ಯಾಪಾಟ್ಯಾ ಚಾಂಪಿಯನ್‌ಶಿಪ್‌ನಲ್ಲಿ ಗದಗ ಜಿಲ್ಲೆಯ ಇಬ್ಬರು ಯುವ ಕ್ರೀಡಾಪಟುಗಳು ಚಿನ್ನದ ಪದಕ ಗೆದ್ದು ಭಾರತಕ್ಕೆ ಕೀರ್ತಿ ತಂದುಕೊಟ್ಟಿದ್ದು, ಜಿಲ್ಲೆಯ ಕ್ರೀಡಾ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಧ್ಯಾಯ ಬರೆದಿದ್ದಾರೆ.

ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮೆರೆದ ಮುಂಡರಗಿ ತಾಲೂಕಿನ ಶಿಂಗಟರಾಯನಕೇರಿ ತಾಂಡಾದ ರಾಹುಲ್ ಶೇಖರ್ ಕಾರಭಾರಿ ಹಾಗೂ ಶಿರಹಟ್ಟಿ ತಾಲೂಕಿನ ದೇವಿಹಾಳ ತಾಂಡಾದ ಉಳವೇಶ ಶಿವಾಜಿ ಲಮಾಣಿ ಅವರನ್ನು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಜಿಲ್ಲಾಡಳಿತ ಭವನದಲ್ಲಿ ಸನ್ಮಾನಿಸಿ ಅಭಿನಂದಿಸಿದರು.

ಜೂನ್ 7ರಿಂದ 10ರವರೆಗೆ ಭೂತಾನ್‌ನಲ್ಲಿ ನಡೆದ 3ನೇ ಸೀನಿಯರ್ ಏಷ್ಯನ್ ಆಟ್ಯಾಪಾಟ್ಯಾ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ತಂಡವನ್ನು ಪ್ರತಿನಿಧಿಸಿದ್ದ ರಾಹುಲ್ ಶೇಖರ್ ಕಾರಭಾರಿ ಅವರು ಅತ್ಯುತ್ತಮ ಪ್ರದರ್ಶನ ನೀಡಿ ತಂಡದೊಂದಿಗೆ ಚಿನ್ನದ ಪದಕ ಜಯಿಸಿದರು. 15 ಆಟಗಾರರನ್ನು ಒಳಗೊಂಡಿದ್ದ ಭಾರತೀಯ ತಂಡವು ಪ್ರತಿಸ್ಪರ್ಧಿಗಳನ್ನು ಮಣಿಸಿ ಏಷ್ಯಾದ ಚಾಂಪಿಯನ್ ಆಗಿ ಹೊರಹೊಮ್ಮಿತು.

ಇದೇ ವೇಳೆ ಜೂನ್ 4ರಿಂದ 6ರವರೆಗೆ ನಡೆದ ಪ್ರಥಮ ಜೂನಿಯರ್ (ಅಂಡರ್-19) ಏಷ್ಯನ್ ಆಟ್ಯಾಪಾಟ್ಯಾ ಚಾಂಪಿಯನ್‌ಶಿಪ್‌ನಲ್ಲಿ ದೇವಿಹಾಳ ತಾಂಡಾದ ಯುವ ಕ್ರೀಡಾಪಟು ಉಳವೇಶ ಶಿವಾಜಿ ಲಮಾಣಿ ಅವರು ಭಾರತೀಯ ತಂಡದ ನಾಯಕನಾಗಿ ತಂಡವನ್ನು ಮುನ್ನಡೆಸಿದರು. ಅವರ ನಾಯಕತ್ವದಲ್ಲಿ 15 ಸದಸ್ಯರ ಭಾರತೀಯ ತಂಡ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ತನ್ನದಾಗಿಸಿಕೊಂಡಿತು.

ಗ್ರಾಮೀಣ ಹಿನ್ನೆಲೆಯಿಂದ ಬಂದಿರುವ ಈ ಇಬ್ಬರು ಕ್ರೀಡಾಪಟುಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಧ್ವಜ ಹಾರಿಸಿ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿರುವುದು ಕ್ರೀಡಾ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಸೀಮಿತ ಸೌಲಭ್ಯಗಳ ನಡುವೆಯೂ ಸಾಧನೆ ಮಾಡುವ ಮೂಲಕ ಅವರು ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ.

ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಗ್ರಾಮೀಣ ಭಾಗದ ಪ್ರತಿಭೆಗಳು ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಪರಿಶ್ರಮ, ಶಿಸ್ತು ಮತ್ತು ಆತ್ಮವಿಶ್ವಾಸ ಇದ್ದರೆ ಯಾವುದೇ ಗುರಿ ಅಸಾಧ್ಯವಲ್ಲ ಎಂಬುದನ್ನು ಈ ಕ್ರೀಡಾಪಟುಗಳು ಸಾಬೀತುಪಡಿಸಿದ್ದಾರೆ ಎಂದು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ಕೆ. ಪಾಟೀಲ ಹಾಗೂ ಶಾಸಕ ಜಿ.ಎಸ್. ಪಾಟೀಲ ಅವರು ದೂರವಾಣಿ ಮೂಲಕ ಕ್ರೀಡಾಪಟುಗಳೊಂದಿಗೆ ಮಾತನಾಡಿ ಅಭಿನಂದನೆ ಸಲ್ಲಿಸಿದರು. ಅಂತರರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಗೆದ್ದು ಜಿಲ್ಲೆ, ರಾಜ್ಯ ಹಾಗೂ ದೇಶದ ಕೀರ್ತಿಯನ್ನು ಹೆಚ್ಚಿಸಿರುವುದು ಶ್ಲಾಘನೀಯ ಸಾಧನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಒಂದೇ ಜಿಲ್ಲೆಯ ಇಬ್ಬರು ಯುವಕರು ಸೀನಿಯರ್ ಹಾಗೂ ಜೂನಿಯರ್ ವಿಭಾಗಗಳಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿರುವುದು ಗದಗ ಜಿಲ್ಲೆಯ ಕ್ರೀಡಾ ಇತಿಹಾಸದಲ್ಲೇ ಅಪರೂಪದ ಸಾಧನೆಯಾಗಿದೆ. ಈ ಸಾಧನೆಯಿಂದ ಜಿಲ್ಲೆಯ ಕ್ರೀಡಾಪಟುಗಳಲ್ಲಿ ಹೊಸ ಆತ್ಮವಿಶ್ವಾಸ ಮೂಡಿದ್ದು, ಆಟ್ಯಾಪಾಟ್ಯಾ ಕ್ರೀಡೆಗೆ ಮತ್ತಷ್ಟು ಉತ್ತೇಜನ ದೊರೆತಿದೆ.

ಕಾರ್ಯಕ್ರಮದಲ್ಲಿ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಶರಣು ಗೊಗೇರಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಮನೋಜ್ ರಾಠೋಡ, ಕ್ರೀಡಾಪಟುಗಳ ಪಾಲಕರು, ತರಬೇತುದಾರರು ಹಾಗೂ ಸ್ನೇಹಿತರು ಉಪಸ್ಥಿತರಿದ್ದರು.

“ಗ್ರಾಮೀಣ ಭಾಗದ ಯುವಕರು ಅಂತರರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಸಾಧನೆ ಮಾಡಿರುವುದು ಗದಗ ಜಿಲ್ಲೆಯ ಹೆಮ್ಮೆ. ಇವರ ಸಾಧನೆ ಇತರ ಯುವಕರಿಗೆ ಪ್ರೇರಣೆಯಾಗಬೇಕು.”

ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!