ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬಿಡದಿ ಟೌನ್ಶಿಪ್ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಲಿಂ. ವೀರಗಂಗಾಧರ ಜಗದ್ಗುರುಗಳ (ಅಜ್ಜಯ್ಯ) ಹೆಸರನ್ನು ಪ್ರಸ್ತಾಪಿಸಿ ವ್ಯಂಗ್ಯವಾಗಿ ಮಾತನಾಡಿರುವುದನ್ನು ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ ತೀವ್ರವಾಗಿ ಖಂಡಿಸಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ” ಎಂಬ ವಿಶ್ವಮಾನವ ಸಂದೇಶ ಸಾರಿದ ಶ್ರೇಷ್ಠ ಜಗದ್ಗುರುಗಳಾದ ಅಜ್ಜಯ್ಯನವರ ತಪೋಬಲ, ವ್ಯಕ್ತಿತ್ವ ಮತ್ತು ಸಮಾಜಮುಖಿ ಸೇವೆಯ ಬಗ್ಗೆ ತಿಳಿದುಕೊಂಡು ಮಾತನಾಡಬೇಕು ಎಂದು ಕುಮಾರಸ್ವಾಮಿ ಅವರಿಗೆ ಸಲಹೆ ನೀಡಿದರು.
ಬಿಡದಿ ಟೌನ್ಶಿಪ್ ಕುರಿತ ಸುದ್ದಿಗೋಷ್ಠಿಯಲ್ಲಿ “ರೈತರನ್ನು ಒಕ್ಕಲೆಬ್ಬಿಸಿ ಎಂದು ಅಜ್ಜಯ್ಯ ಹೇಳಿದ್ದಾರಾ?” ಎಂದು ಪ್ರಶ್ನಿಸಿರುವುದು ದೇಶದಾದ್ಯಂತ ಇರುವ ಲಕ್ಷಾಂತರ ಭಕ್ತರ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಅವರು ಆರೋಪಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ವಿರುದ್ಧ ಇರುವ ರಾಜಕೀಯ ಭಿನ್ನಾಭಿಪ್ರಾಯಕ್ಕಾಗಿ ದೇವರ ಸ್ವರೂಪದಲ್ಲಿ ಪೂಜಿಸಲ್ಪಡುವ ಮಹನೀಯರ ಹೆಸರನ್ನು ಎಳೆದು ತರುವುದು ಸರಿಯಲ್ಲ. ಸ್ವತಃ ಕೃಷಿ ಮಾಡಿ, ಸಕಲ ಜೀವಿಗಳ ಕಲ್ಯಾಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದ ಅಜ್ಜಯ್ಯನವರ ಹೆಸರನ್ನು ರಾಜಕೀಯ ಚರ್ಚೆಗೆ ಬಳಸುವುದು ಖಂಡನೀಯ ಎಂದು ಹೇಳಿದರು.
ರಾಜಕೀಯ ಲಾಭಕ್ಕಾಗಿ ಮಹನೀಯರ ಹೆಸರು ಬಳಸುವ ಪ್ರವೃತ್ತಿಯನ್ನು ಕೈಬಿಡಬೇಕು. ಇಂತಹ ಹೇಳಿಕೆಗಳು ಭಕ್ತರ ಭಾವನೆಗಳಿಗೆ ಧಕ್ಕೆ ತರುವುದಲ್ಲದೆ, ರಾಜಕೀಯವಾಗಿಯೂ ಹಿನ್ನಡೆ ಉಂಟುಮಾಡಬಹುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಅಜ್ಜಯ್ಯನವರ ಭಕ್ತರಾದ ಚಂಬಣ್ಣ ಬಾಳಿಕಾಯಿ, ಆನಂದ ಮೆಕ್ಕಿ, ಕುಬೇರಪ್ಪ ಮಹಾಂತಶೆಟ್ಟರ, ರುದ್ರಮುನಿ ಘಂಟಾಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಮುಖ್ಯಮಂತ್ರಿಗಳ ವಿರುದ್ಧದ ರಾಜಕೀಯ ಭಿನ್ನಾಭಿಪ್ರಾಯಕ್ಕೆ ಅಜ್ಜಯ್ಯನವರಂತಹ ಮಹನೀಯರ ಹೆಸರನ್ನು ಬಳಸಬಾರದು. ಅವರ ಹೆಸರನ್ನು ವ್ಯಂಗ್ಯವಾಗಿ ಪ್ರಸ್ತಾಪಿಸಿರುವುದು ಭಕ್ತರ ಭಾವನೆಗಳಿಗೆ ನೋವುಂಟು ಮಾಡಿದೆ.”
– ಜಿ.ಎಂ. ಮಹಾಂತಶೆಟ್ಟರ, ಮಾಜಿ ಶಾಸಕ



