ವಿಜಯಸಾಕ್ಷಿ ಸುದ್ದಿ, ಗದಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಳೆದ 12 ವರ್ಷಗಳಲ್ಲಿ ಭಾರತವು ಕೇವಲ ತನ್ನ ಚಿತ್ರಣವನ್ನಷ್ಟೇ ಅಲ್ಲ, ತನ್ನ ಅದೃಷ್ಟವನ್ನೂ ಬದಲಿಸಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹೇಳಿದರು.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2014ರಿಂದ ಆರಂಭವಾದ ಮೋದಿ ಸರ್ಕಾರದ ಆಡಳಿತವು ಸುಶಾಸನ, ಅಭಿವೃದ್ಧಿ ಹಾಗೂ ಜನಕಲ್ಯಾಣದ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದೆ. 2014, 2019 ಮತ್ತು 2024ರಲ್ಲಿ ಸತತ ಮೂರು ಬಾರಿ ಜನರು ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಅಧಿಕಾರ ನೀಡಿರುವುದು ಪ್ರಧಾನಿ ಮೋದಿ ಅವರ ಮೇಲಿನ ಜನವಿಶ್ವಾಸಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳಿಂದ ದೇಶದ ಕೋಟ್ಯಂತರ ಜನರ ಬದುಕಿನಲ್ಲಿ ಬದಲಾವಣೆ ಕಂಡುಬಂದಿದೆ. ಜನ್ಧನ್ ಯೋಜನೆ, ಆಯುಷ್ಮಾನ್ ಭಾರತ, ಉಜ್ವಲ ಯೋಜನೆ, ಪಿಎಂ ಕಿಸಾನ್ ಸಮ್ಮಾನ್ ನಿಧಿ, ಪಿಎಂ ಆವಾಸ್ ಯೋಜನೆ ಸೇರಿದಂತೆ ಹಲವಾರು ಯೋಜನೆಗಳು ಬಡವರು, ರೈತರು, ಮಹಿಳೆಯರು ಹಾಗೂ ಯುವಕರ ಬದುಕಿಗೆ ಹೊಸ ಆಶಾಕಿರಣವಾಗಿವೆ ಎಂದು ತಿಳಿಸಿದರು.
ಡಿಜಿಟಲ್ ಆಡಳಿತ ವ್ಯವಸ್ಥೆಯಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಬಿದ್ದಿದ್ದು, ನೇರ ಹಣ ವರ್ಗಾವಣೆ ಮೂಲಕ ಲಕ್ಷಾಂತರ ಕೋಟಿ ರೂಪಾಯಿ ಸೋರಿಕೆಯನ್ನು ತಡೆಗಟ್ಟಲಾಗಿದೆ. ದೇಶದ ಗಡಿ ಭದ್ರತೆ ಬಲಗೊಂಡಿದ್ದು, ಸರ್ಜಿಕಲ್ ಸ್ಟ್ರೈಕ್ ಹಾಗೂ ಏರ್ ಸ್ಟ್ರೈಕ್ ಮೂಲಕ ಭಾರತ ತನ್ನ ಶಕ್ತಿಯನ್ನು ಜಗತ್ತಿಗೆ ತೋರಿಸಿದೆ ಎಂದು ಹೇಳಿದರು.
ಕಳೆದ 12 ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳು, ರೈಲ್ವೆ, ಮೆಟ್ರೋ, ವಿಮಾನ ನಿಲ್ದಾಣಗಳು ಸೇರಿದಂತೆ ಮೂಲಸೌಕರ್ಯ ಕ್ಷೇತ್ರದಲ್ಲಿ ಐತಿಹಾಸಿಕ ಬೆಳವಣಿಗೆ ಕಂಡುಬಂದಿದೆ. ಗ್ರಾಮೀಣ ರಸ್ತೆ, ನೀರಾವರಿ ಹಾಗೂ ಡಿಜಿಟಲ್ ಸಂಪರ್ಕ ವ್ಯವಸ್ಥೆಗಳ ಮೂಲಕ ಅಭಿವೃದ್ಧಿಯ ಫಲಗಳನ್ನು ಕೊನೆಯ ವ್ಯಕ್ತಿಯವರೆಗೂ ತಲುಪಿಸಲಾಗಿದೆ ಎಂದು ಹೇಳಿದರು.
ಭಾರತ ಇಂದು ಜಾಗತಿಕ ಮಟ್ಟದಲ್ಲಿ ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮಿದ್ದು, ಜಿ-20 ಯಶಸ್ವಿ ಅಧ್ಯಕ್ಷತೆ, ಯೋಗ ದಿನಾಚರಣೆಗೆ ವಿಶ್ವದ ಬೆಂಬಲ ಹಾಗೂ ವಿದೇಶಿ ಹೂಡಿಕೆಗಳ ಹೆಚ್ಚಳ ದೇಶದ ಮೇಲಿನ ಜಾಗತಿಕ ವಿಶ್ವಾಸವನ್ನು ತೋರಿಸುತ್ತವೆ ಎಂದು ಸದಾನಂದಗೌಡ ಅಭಿಪ್ರಾಯಪಟ್ಟರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತದ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿಯ ಚುನಾಯಿತ ಪ್ರಧಾನಮಂತ್ರಿಯಾಗಿ ಹೊಸ ದಾಖಲೆ ನಿರ್ಮಿಸುತ್ತಿದ್ದು, ಅವರ ನಾಯಕತ್ವದಲ್ಲಿ ವಿಕಸಿತ ಭಾರತದ ಕನಸು ಸಾಕಾರಗೊಳ್ಳುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಸಿ. ಪಾಟೀಲ, ಬಿಜೆಪಿ ಜಿಲ್ಲಾ ಅಧ್ಯಕ್ಷ ತೋಟಪ್ಪ (ರಾಜು) ಕುರುಡಗಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.
“ಮೋದಿ ಸರ್ಕಾರದ 12 ವರ್ಷಗಳು ಕೇವಲ ಆಡಳಿತದ ಅವಧಿಯಲ್ಲ; ಅದು ಬಡವರ ಬದುಕು ಬದಲಿಸಿದ, ದೇಶದ ಆತ್ಮವಿಶ್ವಾಸ ಹೆಚ್ಚಿಸಿದ ಮತ್ತು ವಿಕಸಿತ ಭಾರತದ ಅಡಿಪಾಯ ಹಾಕಿದ ಸುವರ್ಣಯುಗವಾಗಿದೆ.”
ಡಿ.ವಿ. ಸದಾನಂದಗೌಡ
ಮಾಜಿ ಮುಖ್ಯಮಂತ್ರಿ



