ಬೆಂಗಳೂರು: ರೌಡಿಪಟ್ಟಿಯಿಂದ 66 ಮಂದಿಯ ಹೆಸರು ಕೈಬಿಟ್ಟಿರುವ ಪ್ರಕರಣದ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸೈಲೆಂಟ್ ಸುನಿಲ್, ಒಂಟೆ ರೋಹಿತ್ ಸೇರಿದಂತೆ ಒಟ್ಟು 66 ಮಂದಿಯ ಹೆಸರನ್ನು ರೌಡಿಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಮಾಹಿತಿ ಇದೆ. ಬೆಂಗಳೂರಿನಲ್ಲಿ ಮಾತ್ರ 7 ಮಂದಿಯ ಹೆಸರು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಹೇಳಿದರು.
ಇನ್ನೂ ಐದು ಮಂದಿಗೆ ಸಂಬಂಧಿಸಿದಂತೆ ಪೊಲೀಸ್ ದೂರು ಪ್ರಾಧಿಕಾರದಿಂದ ನೋಟಿಸ್ ಬಂದಿದ್ದು, ಆ ಎಲ್ಲ ದಾಖಲೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಇದುವರೆಗೆ ಯಾವುದೇ ಹೊಸ ಕಡತ (New File) ಸೃಷ್ಟಿಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಈ ವಿಚಾರ ಅತ್ಯಂತ ಸೂಕ್ಷ್ಮವಾಗಿದ್ದು, ನ್ಯಾಯಾಲಯದಲ್ಲಿಯೂ ಪ್ರಕರಣ ಇರುವುದರಿಂದ ಹೆಚ್ಚಿನ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಪೊಲೀಸ್ ಮಹಾನಿರ್ದೇಶಕರು (ಡಿಜಿ & ಐಜಿಪಿ) ಅವರೊಂದಿಗೆ ಚರ್ಚಿಸಿ, ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಹಾಗೂ ಅಗತ್ಯವಿದ್ದರೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.
ರೌಡಿಗಳನ್ನು ನಿಯಂತ್ರಿಸುವ ವಿಧಾನ ಪೊಲೀಸರಿಗೆ ತಿಳಿದಿದ್ದು, ರೌಡಿ ಪರೇಡ್ ಎಂಬುದು ಕೇವಲ ಒಂದು ಹಂತ ಮಾತ್ರ ಎಂದು ಹೇಳಿದರು. ಅಲ್ಲದೆ, ಯಾವ ಕಾರಣಕ್ಕೆ ರೌಡಿಪಟ್ಟಿಯಿಂದ ಹೆಸರು ಕೈಬಿಡಲಾಗಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಲಾಗುವುದು. ಮಾರ್ಗಸೂಚಿಗಳನ್ನು ಪಾಲಿಸದೇ ಈ ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಆರೋಪದ ಬಗ್ಗೆಯೂ ಸಮಗ್ರ ಪರಿಶೀಲನೆ ನಡೆಸಲಾಗುವುದು ಎಂದು ಸೀಮಾಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.



