ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಆದರ್ಶ ಶಿಕ್ಷಣ ಸಮಿತಿಯ ಶ್ರೀ ವಿ.ಆರ್. ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್ನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ “ನಶಾ ಮುಕ್ತ ಭಾರತ ಅಭಿಯಾನ”ದ ಅಂಗವಾಗಿ ಹಮ್ಮಿಕೊಂಡಿರುವ ಆರು ದಿನಗಳ ವಿಶೇಷ ಜಾಗೃತಿ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಲಾಯಿತು.
ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ವಿ.ಟಿ. ನಾಯ್ಕ ಅವರು ಸಸಿಗೆ ನೀರುಣಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಯುವ ಸಮುದಾಯವನ್ನು ಮಾದಕ ವ್ಯಸನದಿಂದ ದೂರವಿರಿಸಿ ಆರೋಗ್ಯಕರ ಜೀವನಶೈಲಿಯತ್ತ ಕೊಂಡೊಯ್ಯುವ ಉದ್ದೇಶದಿಂದ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಅಭಿಯಾನದ ಅಂಗವಾಗಿ ವನಮಹೋತ್ಸವ, ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ವಿಶೇಷ ಉಪನ್ಯಾಸ, ಚಿತ್ರಕಲಾ ಸ್ಪರ್ಧೆ, ಭಾಷಣ ಹಾಗೂ ಪ್ರಬಂಧ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ, ಶಿಕ್ಷಣ, ಉದ್ಯೋಗ ಹಾಗೂ ಕುಟುಂಬ ಜೀವನದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು. ಯುವಜನರಲ್ಲಿ ಜಾಗೃತಿ ಮೂಡಿಸಿ ವ್ಯಸನಮುಕ್ತ ಸಮಾಜ ನಿರ್ಮಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಲಾಯಿತು.
ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಪ್ರೊ. ಬಿ.ಪಿ. ಜೈನ್ ಮಾತನಾಡಿ, ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಸರ್ಕಾರದೊಂದಿಗೆ ಪೋಷಕರು, ಶಿಕ್ಷಕರು ಹಾಗೂ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ ಎಂದು ಹೇಳಿದರು. ಯುವಕರು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಡಾ. ಸುನಿತಾ ನಾಯಕ, ಪ್ರೊ. ಸಲ್ಮಾ ಬೆಳಗಾಂ, ಪ್ರಶಾಂತ್ ಹೊಂಬಾಳಿ, ಪ್ರೊ. ಈಶ್ವರ ಯಾವಗಲ್, ಪ್ರೊ. ಮೋಹನ್ ಡಿ., ಪ್ರೊ. ಸುನಿತಾ ತಿರ್ಲಾಪುರ, ಸವಿತಾ ಇಬ್ಬನಿ, ಭಾಗ್ಯಶ್ರೀ ಕುರಿ, ಯಶವಂತ್ ಯಾವಗಲ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಎನ್ಎಸ್ಎಸ್ ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
“ಮಾದಕ ವ್ಯಸನವು ವ್ಯಕ್ತಿಯ ಆರೋಗ್ಯ, ಶಿಕ್ಷಣ ಹಾಗೂ ಕುಟುಂಬದ ಭವಿಷ್ಯವನ್ನು ಹಾಳು ಮಾಡುವ ದೊಡ್ಡ ಸಾಮಾಜಿಕ ಪಿಡುಗಾಗಿದೆ. ಯುವಜನತೆ ವ್ಯಸನಗಳಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡಾಗ ಮಾತ್ರ ನಶಾ ಮುಕ್ತ ಭಾರತ ನಿರ್ಮಾಣ ಸಾಧ್ಯ.”
– ಡಾ. ವಿ.ಟಿ. ನಾಯ್ಕ, ಪ್ರಾಚಾರ್ಯರು, ಶ್ರೀ ವಿ.ಆರ್. ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್



