ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ರೋಣ ಕ್ಷೇತ್ರದ ಶಾಸಕ ಹಾಗೂ ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿರುವ ಹಿರಿಯ ರಾಜಕಾರಣಿ ಜಿ.ಎಸ್. ಪಾಟೀಲ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಹಾಲಕೆರೆ ಶ್ರೀ ಅನ್ನದಾನೇಶ್ವರ ಮಠದ ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಮುಖ್ಯಮಂತ್ರಿಗೆ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿ.ಎಸ್. ಪಾಟೀಲ ಅವರು ಜನಪರ ಕಾಳಜಿ ಹೊಂದಿರುವ ಸಮರ್ಥ ನಾಯಕರಾಗಿದ್ದು, ಕ್ಷೇತ್ರದ ಜನರ ವಿಶ್ವಾಸವನ್ನು ಗಳಿಸಿದ್ದಾರೆ ಎಂದು ತಿಳಿಸಿದ್ದಾರೆ.
ಗದಗ ಜಿಲ್ಲೆಯಲ್ಲಿಯೇ ಅತಿ ದೊಡ್ಡ ಹಾಗೂ ವಿಸ್ತಾರವಾದ ರೋಣ ಮತಕ್ಷೇತ್ರದ ಅಭಿವೃದ್ಧಿಗೆ ಅವರು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಆದರೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಇನ್ನಷ್ಟು ವಿಶೇಷ ಆದ್ಯತೆ ಮತ್ತು ಸರ್ಕಾರದ ಬೆಂಬಲ ಅಗತ್ಯವಿದೆ ಎಂದು ಹೇಳಿದ್ದಾರೆ.
ಕ್ಷೇತ್ರದ ಸಮಸ್ಯೆಗಳು, ಜನರ ಅಗತ್ಯತೆಗಳು ಹಾಗೂ ಅಭಿವೃದ್ಧಿಯ ಆದ್ಯತೆಗಳ ಬಗ್ಗೆ ಸಂಪೂರ್ಣ ಅರಿವು ಹೊಂದಿರುವ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಿದರೆ ಸರ್ಕಾರ ಮತ್ತು ಕ್ಷೇತ್ರದ ನಡುವೆ ಮತ್ತಷ್ಟು ಸಮನ್ವಯ ಸಾಧಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಾಟೀಲರಿಗೆ ಸಚಿವ ಸ್ಥಾನ ದೊರೆತರೆ ರೋಣ ಮತಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಹೊಸ ಚೈತನ್ಯ ದೊರೆಯಲಿದ್ದು, ಜನರ ಬಹುಕಾಲದ ಆಶಯವೂ ಈಡೇರುತ್ತದೆ ಎಂದು ಶ್ರೀಗಳು ತಿಳಿಸಿದ್ದಾರೆ.



