ಬೆಂಗಳೂರು: ನಗರದ ಹಾಳಾಗಿರುವ ಆಂತರಿಕ ರಸ್ತೆಗಳನ್ನು ಸುಧಾರಿಸುವ ಉದ್ದೇಶದಿಂದ ಐದು ನಗರ ಪಾಲಿಕೆ ವಲಯಗಳ ರಸ್ತೆಗಳಿಗೆ ಸುಮಾರು ₹2,000 ಕೋಟಿ ವೆಚ್ಚದಲ್ಲಿ ಮರುಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಜಿಬಿಎ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಐದು ವಲಯ ಆಯುಕ್ತರು ಹಾಗೂ ಕಸ ನಿರ್ವಹಣಾ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ನಗರದ ಆಂತರಿಕ ರಸ್ತೆಗಳನ್ನು ಉತ್ತಮ ಸ್ಥಿತಿಗೆ ತರುವುದೇ ನಮ್ಮ ಪ್ರಮುಖ ಗುರಿಯಾಗಿದೆ” ಎಂದರು.
ನಗರದ ವಿವಿಧ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳನ್ನು ಮೊದಲು ಗುರುತಿಸಿ, ಅವುಗಳ ದುರಸ್ತಿ ವೆಚ್ಚದ ಅಂದಾಜು ಸಿದ್ಧಪಡಿಸಲಾಗುವುದು. ಬಳಿಕ ಅಲ್ಪಾವಧಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಶೀಘ್ರವಾಗಿ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.
ವಾರ್ಡ್ ಮಟ್ಟದ ರಸ್ತೆ ಅಭಿವೃದ್ಧಿಗೆ ಸರ್ಕಾರ ವಿಶೇಷ ಅನುದಾನ ನೀಡಿದ್ದು, ಯೋಜನೆ ಯಶಸ್ವಿಯಾಗಲು ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ ಎಂದು ಹೇಳಿದರು.
ನಗರದಲ್ಲಿ ಕಸ ಸಮಸ್ಯೆ ಕಡಿಮೆ ಮಾಡಲು ನಾಗರಿಕರು ಸಹಕರಿಸಬೇಕು ಎಂದು ಮನವಿ ಮಾಡಿದ ಸಚಿವರು, ನಿಮ್ಮ ಪ್ರದೇಶಕ್ಕೆ ಕಸದ ವಾಹನ ಬರದಿದ್ದರೆ ನಮ್ಮ ಗಮನಕ್ಕೆ ತರಿರಿ. ಕಸದ ವಾಹನ ನಿಯಮಿತವಾಗಿ ಬರುವಂತೆ ಮಾಡುವುದು ನಮ್ಮ ಜವಾಬ್ದಾರಿ. ಆದರೆ ವಾಹನ ಬಂದ ಬಳಿಕವೂ ಕಸವನ್ನು ರಸ್ತೆ ಬದಿಯಲ್ಲಿ ಎಸೆಯುವುದು ನಗರದ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಹಾನಿಕಾರಕ ಎಂದು ಎಚ್ಚರಿಸಿದರು.
ನಾವು ನಮ್ಮ ವ್ಯವಸ್ಥೆಯನ್ನು ಸುಧಾರಿಸಲು ಬದ್ಧರಾಗಿದ್ದೇವೆ. ಸಾರ್ವಜನಿಕರೂ ಜವಾಬ್ದಾರಿಯಿಂದ ನಡೆದುಕೊಂಡರೆ ಮಾತ್ರ ಬೆಂಗಳೂರು ಮತ್ತಷ್ಟು ಸ್ವಚ್ಛ ಹಾಗೂ ಸುಂದರ ನಗರವಾಗಲಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.



