ಬೆಂಗಳೂರು: ನಗರದ ವರ್ತೂರಿನ ಬೆಳಗೆರೆಯಲ್ಲಿರುವ ಬಿಡಬ್ಲ್ಯೂಎಸ್ಎಸ್ಬಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ ನಡೆದ ಅವಘಡದಲ್ಲಿ ಇಬ್ಬರು ಕಾರ್ಮಿಕರು ನಾಪತ್ತೆಯಾಗಿದ್ದು, ಅವರಿಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸುಮಾರು 40 ಅಡಿ ಆಳದ ಟ್ಯಾಂಕ್ಗೆ ಕೆಲಸದ ನಿಮಿತ್ತ ಇಳಿದಿದ್ದ ಮೂವರು ಕಾರ್ಮಿಕರು ಆಯತಪ್ಪಿ ಬಿದ್ದಿದ್ದಾರೆ. ಈ ಪೈಕಿ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದ್ದು, ಬಿಹಾರದ ಬ್ರಿಜೇಶ್ ಹಾಗೂ ತಮಿಳುನಾಡಿನ ಅಖಿಲೇಶ್ ನಾಪತ್ತೆಯಾಗಿದ್ದಾರೆ. ಟ್ಯಾಂಕ್ ಒಳಗೆ ಆಮ್ಲಜನಕದ ಕೊರತೆ ಇರುವ ಸಾಧ್ಯತೆ ಇದ್ದು, ಇಬ್ಬರ ಸ್ಥಿತಿಗತಿ ಬಗ್ಗೆ ಆತಂಕ ವ್ಯಕ್ತವಾಗಿದೆ.
ಮಾಹಿತಿಯ ಪ್ರಕಾರ, ಕಾರ್ಮಿಕರು ಯಾವುದೇ ಸುರಕ್ಷತಾ ಕಿಟ್, ಆಮ್ಲಜನಕ ಉಪಕರಣ ಅಥವಾ ರಕ್ಷಣಾ ಸಾಧನಗಳಿಲ್ಲದೆ ಟ್ಯಾಂಕ್ಗೆ ಇಳಿದಿದ್ದರು. ಇದೇ ಅವಘಡಕ್ಕೆ ಪ್ರಮುಖ ಕಾರಣವಾಗಿರಬಹುದು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸದೇ ಕಾರ್ಮಿಕರನ್ನು ಕೆಲಸಕ್ಕೆ ಇಳಿಸಲಾಗಿತ್ತೇ ಎಂಬ ಪ್ರಶ್ನೆಗಳು ಮೂಡಿವೆ.
ಈ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಕೋರಮಂಗಲದಿಂದ ವರ್ತೂರು ಭಾಗದವರೆಗೆ ಹರಿದು ಬರುವ ಡ್ರೈನೇಜ್ ನೀರು ಸೇರುತ್ತದೆ. ಲಕ್ಷಾಂತರ ಲೀಟರ್ ಸಾಮರ್ಥ್ಯದ ಟ್ಯಾಂಕ್ನಲ್ಲಿ ಕೊಳಚೆ ನೀರನ್ನು ಸಂಗ್ರಹಿಸಿ ಬಳಿಕ ಶುದ್ಧೀಕರಣ ಪ್ರಕ್ರಿಯೆ ನಡೆಸಲಾಗುತ್ತದೆ. ಘಟನೆ ನಡೆದ ವೇಳೆ ಕಾರ್ಮಿಕರು ಏಣಿ ಮೂಲಕ ಟ್ಯಾಂಕ್ ಒಳಗೆ ಇಳಿದು ನಿರ್ವಹಣಾ ಕಾರ್ಯದಲ್ಲಿ ತೊಡಗಿದ್ದರು ಎಂದು ತಿಳಿದುಬಂದಿದೆ.
ಸದ್ಯ ನಾಪತ್ತೆಯಾಗಿರುವ ಇಬ್ಬರು ಕಾರ್ಮಿಕರ ಪತ್ತೆಗೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.



