ವಿಜಯಸಾಕ್ಷಿ ಸುದ್ದಿ, ಬಾಗಲಕೋಟೆ:
ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ನಿಧನರಾಗಿದ್ದಾರೆ. ಜಿಲ್ಲೆಯ
ಮಹಾಲಿಂಗಪೂರದಲ್ಲಿ 76 ವರ್ಷದ ಇಬ್ರಾಹಿಂ ಸುತಾರ್ ಅವರು ಶನಿವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇಬ್ರಾಹಿಂ ಅವರು ಕಳೆದ ಮೂರ್ನಾಲ್ಕು ದಿನಗಳಿಂದ ಹೃದಯ ಬೇನೆಯಿಂದ ಬಳಲುತ್ತಿದ್ದರು. ಅಲ್ಲದೇ, ಚಿಕಿತ್ಸೆಯನ್ನೂ ಪಡೆದಿದ್ದರು.
ಶನಿವಾರ ಬೆಳ್ಳಂಬೆಳಗ್ಗೆ ಪುನಃ ಲಘು ಹೃದಯಾಘಾತವಾಗಿದೆ. ತಕ್ಷಣ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಬ್ರಾಹಿಂ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಖ್ಯಾತ ಪ್ರವಚನಾಕರರಾಗಿದ್ದ ಇಬ್ರಾಹಿಂ ಸುತಾರ್ ಅವರು ನಾಡಿನೆಲ್ಲೆಡೆ ಪ್ರವಚನ ನೀಡಿ ಭಾವೈಕ್ಯತೆಯ ಸಂದೇಶ ಸಾರಿ ಹೆಸರು ವಾಸಿಯಾಗಿದ್ದರು. ಹಿಂದೂ-ಮುಸ್ಲಿಂ ಭಾವೈಕ್ಯತೆಯ ಶ್ರೇಷ್ಠ ಪ್ರವಚಕ, ಸೂಫಿ ಸಂತರಾಗಿದ್ದ ಸುತಾರ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಲಭಿಸಿದ್ದವು. ಇಬ್ರಾಹಿಂ ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.