ಬೆಂಗಳೂರು: ದೇವರ ಮೇಲಿನ ಅಪಾರ ಭಕ್ತಿ ಮತ್ತು ನಂಬಿಕೆಗೆ ಹೆಸರಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ಬಳಿಕ ಪತ್ನಿ ಉಷಾ ಅವರೊಂದಿಗೆ ತಿರುಪತಿ ತಿರುಮಲಕ್ಕೆ ಭೇಟಿ ನೀಡಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ.
ಶುಕ್ರವಾರ ಮುಂಜಾನೆ ತಿರುಮಲ ದೇವಸ್ಥಾನಕ್ಕೆ ತೆರಳಿದ ಸಿಎಂ ದಂಪತಿ ವಿಶೇಷ ಪೂಜೆ ಸಲ್ಲಿಸಿ, ರಾಜ್ಯದ ಜನರ ಸುಖ-ಶಾಂತಿ, ಸಮೃದ್ಧಿ ಹಾಗೂ ಅಭಿವೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು. ದೇವರ ದರ್ಶನದ ಬಳಿಕ ದೇವಸ್ಥಾನದಲ್ಲಿ ಸೆರೆಹಿಡಿದಿರುವ ಚಿತ್ರಗಳನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಅವರು,
“ಓಂ ನಮೋ ವೆಂಕಟೇಶಾಯ
ಕಾಮಿತಾರ್ಥ ಪ್ರದಾಯಿನೇ
ಪ್ರಣತಃ ಕ್ಲೇಶ ನಾಶಾಯ
ಗೋವಿಂದಾಯ ನಮೋ ನಮಃ”
ಎಂಬ ಶ್ಲೋಕವನ್ನು ಉಲ್ಲೇಖಿಸಿ, “ಧರ್ಮಪತ್ನಿಯೊಂದಿಗೆ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿಯ ಸನ್ನಿಧಿಗೆ ಭೇಟಿ ನೀಡಿ ದಿವ್ಯ ದರ್ಶನ ಪಡೆದಿದ್ದೇನೆ. ನಾಡಿನ ಒಳಿತಿಗಾಗಿ ಪ್ರಾರ್ಥಿಸಿದ್ದು, ಜಗದೋದ್ಧಾರಕ ಶ್ರೀನಿವಾಸನ ಅನುಗ್ರಹ ಪ್ರತಿಯೊಬ್ಬರ ಮೇಲೂ ಇರಲಿ. ರಾಜ್ಯ ಸುಭಿಕ್ಷವಾಗಿ ಬೆಳೆಯಲಿ” ಎಂದು ಆಶಿಸಿದ್ದಾರೆ.
ಇತ್ತೀಚೆಗಷ್ಟೇ ನಗರದ ಅಧಿದೇವತೆ ಅಣ್ಣಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದ ಸಿಎಂ, ಇದೀಗ ತಿರುಮಲ ಶ್ರೀನಿವಾಸನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮತ್ತೊಮ್ಮೆ ತಮ್ಮ ಭಕ್ತಿಭಾವವನ್ನು ವ್ಯಕ್ತಪಡಿಸಿದ್ದಾರೆ.



