ಲಕ್ನೋ: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಹಣ ದುರ್ಬಳಕೆ ಅಥವಾ ಕಳ್ಳತನ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.
ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರು ನೀಡಿರುವ ಕೋಟ್ಯಂತರ ರೂಪಾಯಿ ದೇಣಿಗೆ ಹಣದ ಅಕ್ರಮ ಆರೋಪಗಳ ಕುರಿತು ಮಾತನಾಡಿದ ಅವರು, ಶ್ರೀರಾಮನ ಆದರ್ಶಗಳಾದ ಘನತೆ, ಶಿಸ್ತು ಮತ್ತು ತಾಳ್ಮೆಯನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು. ಅಯೋಧ್ಯೆ ಮತ್ತು ರಾಮ ಜನ್ಮಭೂಮಿ ಮಂದಿರದ ಹೆಸರಿಗೆ ಕಳಂಕ ತರಲು ಕೆಲವರು ಪ್ರಯತ್ನಿಸುತ್ತಿದ್ದು, ಅಂತಹವರ ಪ್ರಚಾರಕ್ಕೆ ಜನರು ಮರುಳಾಗಬಾರದು ಎಂದು ಮನವಿ ಮಾಡಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರ ಬಳಿಯೇ ದಾಖಲೆಗಳು ಅಥವಾ ಸಾಕ್ಷ್ಯಗಳಿದ್ದರೂ ಅವುಗಳನ್ನು ತಕ್ಷಣ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಸಲ್ಲಿಸಬೇಕು. ರಾಮ ಮಂದಿರ ಟ್ರಸ್ಟ್ನ ಮನವಿಯ ಮೇರೆಗೆ ಎಸ್ಐಟಿ ರಚಿಸಲಾಗಿದ್ದು, ಪ್ರಕರಣದ ಎಲ್ಲ ಅಂಶಗಳನ್ನು ಸಮಗ್ರವಾಗಿ ತನಿಖೆ ಮಾಡಿ ಸತ್ಯವನ್ನು ಬಹಿರಂಗಪಡಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಯೋಧ್ಯೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ದ್ವಿಮುಖ ನಿಲುವು ತಾಳಿದೆ ಎಂದು ಆರೋಪಿಸಿದ ಯೋಗಿ, ರಾಮ ಮಂದಿರ ನಿರ್ಮಾಣಕ್ಕೆ ಹಿಂದೆ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಇಂದು ಅಯೋಧ್ಯೆಯ ಬಗ್ಗೆ ಕಾಳಜಿ ತೋರಿಸುತ್ತಿರುವಂತೆ ವರ್ತಿಸುತ್ತಿದೆ ಎಂದು ಟೀಕಿಸಿದರು. ನ್ಯಾಯಾಲಯದಲ್ಲೂ ರಾಮ ಮಂದಿರ ನಿರ್ಮಾಣದ ವಿರುದ್ಧ ನಿಂತಿದ್ದ ಕಾಂಗ್ರೆಸ್ ಈಗ ರಾಮಭಕ್ತರ ಪರ ಮಾತನಾಡುತ್ತಿರುವುದು ರಾಜಕೀಯ ನಾಟಕ ಎಂದು ಲೇವಡಿ ಮಾಡಿದರು.
ಸಮಾಜವಾದಿ ಪಕ್ಷದ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಹಿಂದೆ ಕರಸೇವಕರ ವಿರುದ್ಧ ಕ್ರಮ ಕೈಗೊಂಡಿದ್ದವರು ಇಂದು ರಾಮಭಕ್ತರ ಪರವಾಗಿ ಮಾತನಾಡುತ್ತಿರುವುದು ವಿಪರ್ಯಾಸ ಎಂದು ಹೇಳಿದರು.
ರಾಮ ಮಂದಿರದ ದೇಣಿಗೆ ಹಣದ ಅಕ್ರಮ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದ್ದು, ತನಿಖೆಯಲ್ಲಿ ತಪ್ಪಿತಸ್ಥರು ಯಾರು ಎಂಬುದು ಬಹಿರಂಗವಾದ ಬಳಿಕ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಯೋಗಿ ಆದಿತ್ಯನಾಥ್ ಸ್ಪಷ್ಟಪಡಿಸಿದರು.



