ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ವಿರುದ್ಧವಾಗಿ ಅಡ್ಡ ಮತದಾನ ನಡೆದಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ವಪಕ್ಷದ ಶಾಸಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸೇರುವ ಉದ್ದೇಶವಿದ್ದರೆ ನೇರವಾಗಿ ಹೇಳಿ ಪಕ್ಷ ತೊರೆಯಿರಿ, ಆದರೆ ಪಕ್ಷದೊಳಗಿದ್ದು ಈ ರೀತಿಯ ನಡೆ ಸರಿಯಲ್ಲ ಎಂದು ಖಡಕ್ ಸಂದೇಶ ರವಾನಿಸಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಭವಿಷ್ಯ ಇಲ್ಲ ಎಂಬ ಭಾವನೆ ಯಾರಿಗಾದರೂ ಇದ್ದರೆ ತಾವು ಯಾವುದೇ ಅಡ್ಡಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ಗೆ ಹೋಗಲು ಇಚ್ಛಿಸುವವರು ಧೈರ್ಯವಾಗಿ ಹೇಳಿ ಹೋಗಲಿ, ಆದರೆ ಪಕ್ಷಕ್ಕೆ ಬೆನ್ನಿಗೆ ಚೂರಿ ಹಾಕುವ ರೀತಿಯ ರಾಜಕೀಯ ಮಾಡಬಾರದು ಎಂದು ಕಿಡಿಕಾರಿದರು.
ಅಡ್ಡ ಮತದಾನ ಮಾಡಿದವರ ಪತ್ತೆಗೆ ಬಿಜೆಪಿ ಮೂರು ಸದಸ್ಯರ ತನಿಖಾ ತಂಡ ರಚಿಸಿದ್ದು, ಅದರ ನೇತೃತ್ವವನ್ನು ಸಿ.ಟಿ. ರವಿ ಅವರಿಗೆ ವಹಿಸಲಾಗಿದೆ ಎಂದು ತಿಳಿಸಿದರು. ತಾವು ಶೀಘ್ರದಲ್ಲೇ ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳುವುದಾಗಿ ಹೇಳಿದರು.
ಪಕ್ಷದ ಮುಂದಿನ ರಾಜಕೀಯ ನಿರ್ಧಾರಗಳ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, 2028ರ ವಿಧಾನಸಭೆ ಚುನಾವಣೆಯೇ ತಮ್ಮ ಪ್ರಮುಖ ಗುರಿ ಎಂದು ಹೇಳಿದರು. ರಾಜ್ಯದಲ್ಲಿ ಜನಪರ ಆಡಳಿತ ನೀಡಬಲ್ಲ ಪರ್ಯಾಯ ಸರ್ಕಾರವನ್ನು ನಿರ್ಮಿಸುವುದು ಮೊದಲ ಆದ್ಯತೆ. ಮುಖ್ಯಮಂತ್ರಿ ಹುದ್ದೆ ಸೇರಿದಂತೆ ಉಳಿದ ವಿಚಾರಗಳು ನಂತರದ ವಿಷಯ ಎಂದು ಸ್ಪಷ್ಟಪಡಿಸಿದರು.
ಪರಿಷತ್ ಚುನಾವಣೆಯಲ್ಲಿ ಶಾಸಕರ ಮೇಲೆ ಆರ್ಥಿಕ ಪ್ರಭಾವ ಬೀರುವ ಪ್ರಯತ್ನಗಳು ನಡೆದಿರುವ ಅನುಮಾನ ವ್ಯಕ್ತಪಡಿಸಿದ ಅವರು, ಮತದಾನದ ಸಂದರ್ಭದಲ್ಲಿ ಭಾರೀ ಪ್ರಮಾಣದ ವ್ಯವಹಾರ ನಡೆದಿರಬಹುದು ಎಂದು ಆರೋಪಿಸಿದರು. ಸರ್ಕಾರದ ವತಿಯಿಂದ ಅನುದಾನದ ಆಮಿಷ ಒಡ್ಡಲಾಗಿದೆ ಎಂಬ ಮಾಹಿತಿ ತಮಗೆ ಲಭ್ಯವಾಗಿದೆ ಎಂದರು.
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಯಾವುದೇ ಬಿರುಕು ಇಲ್ಲ ಎಂದು ಪುನರುಚ್ಚರಿಸಿದ ಕುಮಾರಸ್ವಾಮಿ, ಅಭ್ಯರ್ಥಿ ಕಣಕ್ಕಿಳಿಸುವ ಮುನ್ನವೇ ಬಿಜೆಪಿ ನಾಯಕರಾದ ಬಿ.ವೈ. ವಿಜಯೇಂದ್ರ, ಆರ್. ಅಶೋಕ್ ಹಾಗೂ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ತಿಳಿಸಿದರು.



