ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣ ನೀತಿಯನ್ನು ಜಾರಿಗೆ ತರಲು ಮುಂದಾಗಿರುವ ಕ್ರಮವನ್ನು ವಿರೋಧಿಸಿ ತಾಲೂಕು ರೈತ ಸಂಘದ ನೇತೃತ್ವದಲ್ಲಿ ರೈತರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಉಪ ತಹಸೀಲ್ದಾರ್ ಶಿವಕುಮಾರ್ ಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ರೈತ ಸಂಘದ ಸಂಚಾಲಕ ಶಿಗೇನಹಳ್ಳಿ ಬಸವರಾಜ್, ವಿದ್ಯುತ್ ಖಾಸಗೀಕರಣದಿಂದ ರೈತರಿಗೆ ದೊರೆಯುತ್ತಿರುವ ಸೌಲಭ್ಯಗಳಿಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ಕೃಷಿ ಪಂಪ್ಸೆಟ್ಗಳಿಗೆ ನೀಡುತ್ತಿರುವ ಉಚಿತ ವಿದ್ಯುತ್ ಯೋಜನೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರದು ಹಾಗೂ ಗ್ರಾಮೀಣ ಭಾಗಗಳಿಗೆ ನಿರಂತರ ಮತ್ತು ಗುಣಮಟ್ಟದ ವಿದ್ಯುತ್ ಪೂರೈಕೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ತಾಲೂಕು ರೈತ ಸಂಘದ ಮುಖಂಡ ಟಿ. ಕೊಟ್ರೇಶ್ ಮಾತನಾಡಿ, ವಿದ್ಯುತ್ ಕ್ಷೇತ್ರವನ್ನು ಖಾಸಗಿ ಕಂಪನಿಗಳಿಗೆ ಒಪ್ಪಿಸಿದರೆ ರೈತರು ಹಾಗೂ ಸಾಮಾನ್ಯ ಗ್ರಾಹಕರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ. ವಿದ್ಯುತ್ ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಿ, ಹಳೆಯ ಟ್ರಾನ್ಸ್ಫಾರ್ಮರ್ಗಳ ಬದಲಾವಣೆ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಮನವಿಯಲ್ಲಿ ವಿದ್ಯುತ್ ಖಾಸಗೀಕರಣ ನೀತಿಯನ್ನು ಹಿಂಪಡೆಯುವುದು, ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ಯೋಜನೆಯನ್ನು ಮುಂದುವರಿಸುವುದು, ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಖಚಿತಪಡಿಸುವುದು, ವಿದ್ಯುತ್ ಅವಘಡಗಳಲ್ಲಿ ಮೃತಪಟ್ಟ ಹಾಗೂ ಗಾಯಗೊಂಡವರಿಗೆ ಸೂಕ್ತ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಪ್ರಸ್ತಾಪಿಸಲಾಯಿತು.
ಈ ಸಂದರ್ಭದಲ್ಲಿ ನಾಗೇಶ್ ಸಿ., ನಾಗರಾಜ ತಳವಾರ, ಸೋಮು, ಮಾಬು, ಎಸ್.ಕೆ. ಸೋಮನಾಥ್, ಎಸ್.ಕೆ. ಮಹೇಶ್, ತಂಬ್ರಹಳ್ಳಿ ಮಹೇಶ್, ಮದ್ದಿ ದುರ್ಗಮ್ಮ ಸೇರಿದಂತೆ ತಾಲೂಕು ರೈತ ಸಂಘದ ಪದಾಧಿಕಾರಿಗಳು, ವಿವಿಧ ಗ್ರಾಮಗಳ ರೈತರು ಹಾಗೂ ರೈತ ಹೋರಾಟಗಾರರು ಉಪಸ್ಥಿತರಿದ್ದರು.
“ವಿದ್ಯುತ್ ಖಾಸಗೀಕರಣ ರೈತರಿಗೆ ಮಾರಕವಾಗಲಿದೆ. ಉಚಿತ ವಿದ್ಯುತ್ ಯೋಜನೆ ಮತ್ತು ಗ್ರಾಮೀಣ ವಿದ್ಯುತ್ ಪೂರೈಕೆಯನ್ನು ಯಾವುದೇ ಕಾರಣಕ್ಕೂ ದುರ್ಬಲಗೊಳಿಸಬಾರದು.”
ಶಿಗೇನಹಳ್ಳಿ ಬಸವರಾಜ್, ತಾಲೂಕು ರೈತ ಸಂಘದ ಸಂಚಾಲಕ



