ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಹಿರಿಯ ನಾಗರಿಕರು ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳನ್ನು ಸಮರ್ಪಕವಾಗಿ ಪಡೆಯಬೇಕಾದರೆ ಸಂಘಟಿತರಾಗುವುದು ಅತ್ಯಂತ ಅಗತ್ಯ ಎಂದು ನಿವೃತ್ತ ಶಿಕ್ಷಕಿ ಸುವರ್ಣ ಸಿ. ಹಿರೇಮಠ ಹೇಳಿದರು.
ಪಟ್ಟಣದ ಚಂಬಣ್ಣ ಬಾಳಿಕಾಯಿ ಅವರ ಮಿಲ್ ಆವರಣದಲ್ಲಿ ನಡೆದ ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಭೆಯಲ್ಲಿ ಅವರು ಮಾತನಾಡಿದರು.
ಹಿರಿಯ ನಾಗರಿಕರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ಸಂಘದ ಪಾತ್ರ ಮಹತ್ವದ್ದಾಗಿದೆ. ಯುವ ಪೀಳಿಗೆಗೆ ಹಿರಿಯರ ಅನುಭವ ಮತ್ತು ಮಾರ್ಗದರ್ಶನ ಅಗತ್ಯವಾಗಿದ್ದು, ಮಕ್ಕಳು ಹಿರಿಯರನ್ನು ಗೌರವದಿಂದ ಕಾಣಬೇಕು ಎಂದು ಹೇಳಿದರು.
ಹಿರಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದರೊಂದಿಗೆ ವೃದ್ಧಾಪ್ಯದಲ್ಲಿಯೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಸರ್ಕಾರವೂ ಹಿರಿಯ ನಾಗರಿಕರಿಗೆ ಹೆಚ್ಚಿನ ಸೌಲಭ್ಯ ಮತ್ತು ಪ್ರೋತ್ಸಾಹ ನೀಡಬೇಕು ಎಂದು ಒತ್ತಾಯಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಿ.ಆರ್. ಲಕ್ಕುಂಡಿಮಠ ಹಾಗೂ ಗೌರವಾಧ್ಯಕ್ಷ ಚಂಬಣ್ಣ ಬಾಳಿಕಾಯಿ ಮಾತನಾಡಿ, ಹಿರಿಯ ನಾಗರಿಕರ ಸಭೆ ಹಾಗೂ ಚಟುವಟಿಕೆಗಳಿಗೆ ಸೂಕ್ತ ಸ್ಥಳದ ಅವಶ್ಯಕತೆ ಇದ್ದು, ಈ ಬಗ್ಗೆ ಪುರಸಭೆ ಹಾಗೂ ಜನಪ್ರತಿನಿಧಿಗಳು ಗಮನಹರಿಸಬೇಕು ಎಂದು ಮನವಿ ಮಾಡಿದರು.
ಹಿರಿಯ ನಾಗರಿಕರ ಗುರುತಿನ ಚೀಟಿಯ ಮೂಲಕ ಆರೋಗ್ಯ ಸೇವೆ, ಪ್ರಯಾಣ ದರ ರಿಯಾಯಿತಿ ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯಗಳನ್ನು ಪಡೆಯಬಹುದಾಗಿದ್ದು, ಹಿರಿಯರು ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರು ಹಾಗೂ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು.
ಸಭೆಯಲ್ಲಿ ಕುಬೇರಪ್ಪ ಮಹಾಂತಶೆಟ್ಟರ, ಚನ್ನಪ್ಪ ಕೋಲಕಾರ, ಶಕುಂತಲಾ ಅಳಗವಾಡಿ, ಎಲ್.ಆರ್. ಮಲ್ಲಸಮುದ್ರ, ಚಂದ್ರಶೇಖರ ಸೌದತ್ತಿ, ನಂದಿಕೋಲಮಠ, ನಿಂಗಪ್ಪ ಗೊರವರ, ನೀಲಪ್ಪ ಕರ್ಜಕಣ್ಣವರ, ಸೂಗಿರಪ್ಪ ವಾಲಿಶೆಟ್ಟರ, ನಾಗರಾಜ ಸೂರಣಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ನಾಗಭೂಷಣ ಪವಾಡಶೆಟ್ಟರ ಹಾಗೂ ಐ.ಎಸ್. ಮಡಿವಾಳರ ಕಾರ್ಯಕ್ರಮ ನಿರೂಪಿಸಿದರು.
“ಹಿರಿಯ ನಾಗರಿಕರು ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳನ್ನು ಸಮರ್ಪಕವಾಗಿ ಪಡೆಯಬೇಕಾದರೆ ಸಂಘಟಿತರಾಗುವುದು ಅತ್ಯಂತ ಅಗತ್ಯ.”
— ಸುವರ್ಣ ಸಿ. ಹಿರೇಮಠ



