Home India News ರಾಮ ಮಂದಿರ ಕಾಣಿಕೆ ಹಣ ದುರ್ಬಳಕೆ ಪ್ರಕರಣ: ಚಂಪತ್ ರಾಯ್ ಆಪ್ತ ಸಹಾಯಕ ಸೇರಿ 8 ಮಂದಿ ಬಂಧನ

ರಾಮ ಮಂದಿರ ಕಾಣಿಕೆ ಹಣ ದುರ್ಬಳಕೆ ಪ್ರಕರಣ: ಚಂಪತ್ ರಾಯ್ ಆಪ್ತ ಸಹಾಯಕ ಸೇರಿ 8 ಮಂದಿ ಬಂಧನ

0
ರಾಮ ಮಂದಿರ ಕಾಣಿಕೆ ಹಣ ದುರ್ಬಳಕೆ ಪ್ರಕರಣ: ಚಂಪತ್ ರಾಯ್ ಆಪ್ತ ಸಹಾಯಕ ಸೇರಿ 8 ಮಂದಿ ಬಂಧನ
Spread the love

ಲಕ್ನೋ: ಅಯೋಧ್ಯೆಯ ಶ್ರೀರಾಮ ಮಂದಿರದ ಕಾಣಿಕೆ ಹಾಗೂ ದೇಣಿಗೆ ಹಣದ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ ತನಿಖೆಯಲ್ಲಿ ವಿಶೇಷ ತನಿಖಾ ತಂಡ (SIT) ಮಹತ್ವದ ಕ್ರಮ ಕೈಗೊಂಡಿದ್ದು, ಪ್ರಕರಣದಲ್ಲಿ ಹೆಸರಿಸಲಾದ ಎಂಟು ಪ್ರಮುಖ ಆರೋಪಿಗಳನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಲ್ಲಿ ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ಸಹಾಯಕ ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್ ಕೂಡ ಸೇರಿದ್ದಾರೆ ಎನ್ನಲಾಗಿದೆ.

ಬಂಧಿತರಲ್ಲಿ ಟಿನ್ನು ಯಾದವ್ ಜೊತೆಗೆ ಅನುಕಲ್ಪ್ ಮಿಶ್ರಾ, ಅವಿನಾಶ್ ಶುಕ್ಲಾ, ಕರುಣೇಶ್ ಪಾಂಡೆ, ಲವ್ ಕುಶ್ ಮಿಶ್ರಾ, ರಾಮ ಶಂಕರ್ ಮಿಶ್ರಾ ಹಾಗೂ ಸುಭಾಷ್ ಶ್ರೀವಾಸ್ತವ ಸೇರಿದಂತೆ ಒಟ್ಟು ಎಂಟು ಮಂದಿ ಇದ್ದಾರೆ. ಇವರೆಲ್ಲರೂ ದೇವಸ್ಥಾನಕ್ಕೆ ಬಂದ ಕಾಣಿಕೆ ಹಾಗೂ ನಗದು ಹಣವನ್ನು ಎಣಿಸುವ ಜವಾಬ್ದಾರಿಯಲ್ಲಿದ್ದ ತಂಡದ ಸದಸ್ಯರಾಗಿದ್ದರು ಎಂದು ತಿಳಿದುಬಂದಿದೆ.

ದೇವಸ್ಥಾನದ ಒಳಾಂಗಣದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಗಳು ಹಾಗೂ ವಿಧಿವಿಜ್ಞಾನ (ಫೊರೆನ್ಸಿಕ್) ಸಾಕ್ಷ್ಯಗಳ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆ (BNS)ಯ ವಿವಿಧ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಿಸಲಾಗಿತ್ತು. ಪ್ರಕರಣ ದಾಖಲಾಗಿದ ಒಂದೇ ದಿನದೊಳಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಹಗರಣಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ತನಿಖಾ ಮೂಲಗಳು ತಿಳಿಸಿವೆ. ಆದರೆ, ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅಥವಾ ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ವಿರುದ್ಧ ಇದುವರೆಗೆ ಯಾವುದೇ ಅಧಿಕೃತ ಎಫ್‌ಐಆರ್ ದಾಖಲಾಗಿಲ್ಲ.

ಈ ಪ್ರಕರಣ ಉತ್ತರ ಪ್ರದೇಶ ರಾಜಕೀಯದಲ್ಲೂ ಚರ್ಚೆಗೆ ಗ್ರಾಸವಾಗಿದ್ದು, ಮುಂಬರುವ ವಿಧಾನಸಭೆ ಚುನಾವಣೆಗೆ ಮುನ್ನ ಹೊಸ ಸಂಚಲನ ಸೃಷ್ಟಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಉತ್ತರ ಪ್ರದೇಶದ ಹಣಕಾಸು ಸಚಿವ ಸುರೇಶ್ ಖನ್ನಾ,

ಯೋಗಿ ಆದಿತ್ಯನಾಥ್ ಸರ್ಕಾರ ಅಪರಾಧಗಳ ವಿರುದ್ಧ ಆರಂಭದಿಂದಲೂ ‘ಶೂನ್ಯ ಸಹಿಷ್ಣುತೆ’ ನೀತಿಯನ್ನು ಅನುಸರಿಸುತ್ತಿದೆ. ರಾಮ ಮಂದಿರದ ಪವಿತ್ರ ದೇಣಿಗೆ ಹಣದಲ್ಲಿ ಅಕ್ರಮ ಎಸಗಿರುವ ಯಾರನ್ನೂ ಬಿಡುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here