ರಾಯಚೂರು: ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ನಿಯಂತ್ರಕ ಮತ್ತು ಮಹಾಲೇಖಪರಿಶೋಧಕರ (ಸಿಎಜಿ) ವರದಿಯಲ್ಲಿ ಉಲ್ಲೇಖಿಸಿರುವ 60 ಕೋಟಿ ರೂಪಾಯಿ ಬ್ಯಾಂಕ್ ಖಾತೆಯೇ ಇಲ್ಲದವರಿಗೆ ಜಮೆಯಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಹೆಚ್.ಎಂ. ರೇವಣ್ಣ ಹೇಳಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತಪಟ್ಟವರ ಖಾತೆಗಳಿಗೆ ಹಣ ಜಮೆಯಾಗಿರುವ ಅಂಶ ಮಾತ್ರ ಸರಿಯಾಗಿದೆ. ಆದರೆ ಒಂದೇ ಬ್ಯಾಂಕ್ ಖಾತೆಗೆ 20 ಮಂದಿ ಫಲಾನುಭವಿಗಳ ಹಣ ಜಮೆಯಾಗಿದೆ ಎಂಬ ವರದಿಯ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.
ಪಂಚ ಗ್ಯಾರಂಟಿ ಯೋಜನೆಗಳನ್ನು ಆರಂಭಿಸಿದ ವೇಳೆ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಂಪೂರ್ಣ ಆನ್ಲೈನ್ ವ್ಯವಸ್ಥೆಯ ಮೂಲಕ ಅರ್ಜಿ ಸ್ವೀಕಾರ, ನೋಂದಣಿ ಮತ್ತು ಹಣ ಜಮೆ ಪ್ರಕ್ರಿಯೆ ನಡೆಸಲಾಗಿತ್ತು. ಈ ಕಾರಣದಿಂದ ಕೆಲ ತಾಂತ್ರಿಕ ಲೋಪಗಳು ನಡೆದಿರುವುದು ಈಗ ಪರಿಶೀಲನೆಯಲ್ಲಿ ಗೊತ್ತಾಗಿದೆ ಎಂದು ಅವರು ತಿಳಿಸಿದರು.
ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ ವೇಳೆ ಸುಮಾರು 2.80 ಲಕ್ಷ ಫಲಾನುಭವಿಗಳು ಮೃತಪಟ್ಟಿರುವುದು ಪತ್ತೆಯಾಗಿದೆ. ಅವರ ಖಾತೆಗಳಿಗೆ ಒಟ್ಟು 115 ಕೋಟಿ ರೂಪಾಯಿ ಜಮೆಯಾಗಿದ್ದು, ಈಗಾಗಲೇ 15 ಕೋಟಿ ರೂಪಾಯಿಯನ್ನು ವಾಪಸ್ ಪಡೆಯಲಾಗಿದೆ. ಉಳಿದ 100 ಕೋಟಿ ರೂಪಾಯಿ ಮರುಪಡೆಯಲು ಬ್ಯಾಂಕ್ಗಳೊಂದಿಗೆ ಚರ್ಚೆ ನಡೆಯುತ್ತಿದೆ ಎಂದು ರೇವಣ್ಣ ಮಾಹಿತಿ ನೀಡಿದರು.
ಗೃಹಜ್ಯೋತಿ ಯೋಜನೆಯಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯವನ್ನು ಕೆಲವು ಅಂಗಡಿ ಹಾಗೂ ವಾಣಿಜ್ಯ ಚಟುವಟಿಕೆಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿ ರೇಷನ್ ಕಾರ್ಡ್ಗಳನ್ನು ಪಡೆದು ಸೌಲಭ್ಯ ಪಡೆಯುತ್ತಿರುವ ಪ್ರಕರಣಗಳೂ ಬೆಳಕಿಗೆ ಬಂದಿದ್ದು, ಅವುಗಳ ಪರಿಶೀಲನೆ ನಡೆಯುತ್ತಿದೆ ಎಂದರು.