HomeGadag Newsವಿಷಮುಕ್ತ ಆಹಾರಕ್ಕೆ ಕೈತೋಟವೇ ಪರಿಹಾರ: ಡಾ. ಸತೀಶ ಆರ್. ಪಾಟೀಲ

ವಿಷಮುಕ್ತ ಆಹಾರಕ್ಕೆ ಕೈತೋಟವೇ ಪರಿಹಾರ: ಡಾ. ಸತೀಶ ಆರ್. ಪಾಟೀಲ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಇಂದಿನ ಜೀವನಶೈಲಿಯಲ್ಲಿ ಮಾನಸಿಕ ಒತ್ತಡ, ಆರೋಗ್ಯ ಸಮಸ್ಯೆಗಳು ಹಾಗೂ ವಿಷಕಾರಿ ಆಹಾರದ ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ತಮ್ಮ ಮನೆಯ ಪ್ರಾಂಗಣದಲ್ಲಿ ಕೈತೋಟ ನಿರ್ಮಿಸಿ ವಿಷಮುಕ್ತ ತರಕಾರಿ ಹಾಗೂ ಸೊಪ್ಪುಗಳನ್ನು ಬೆಳೆಸಿಕೊಳ್ಳಬೇಕು ಎಂದು ಬಾಗಲಕೋಟೆಯ ತೋಟಗಾರಿಕಾ ಮಹಾವಿದ್ಯಾಲಯದ ಮುಖ್ಯ ಪ್ರಾಧ್ಯಾಪಕರು ಹಾಗೂ ವಿಶೇಷಾಧಿಕಾರಿ ಡಾ. ಸತೀಶ ಆರ್. ಪಾಟೀಲ ಹೇಳಿದರು.

ನಗರದ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಮಹಿಳಾ ಘಟಕ ಹಾಗೂ ಅಕ್ಕನ ಬಳಗ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ‘ಮನೆಯ ಪ್ರಾಂಗಣದಲ್ಲಿ ಕೈತೋಟ ನಿರ್ಮಾಣ’ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾರುಕಟ್ಟೆಯಲ್ಲಿ ದೊರೆಯುವ ಅನೇಕ ತರಕಾರಿ, ಸೊಪ್ಪು ಮತ್ತು ಹಣ್ಣುಗಳಲ್ಲಿ ಅಧಿಕ ಪ್ರಮಾಣದ ಕೀಟನಾಶಕ ಹಾಗೂ ರಾಸಾಯನಿಕಗಳ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಮನೆಯ ಮೇಲ್ಛಾವಣಿ, ಖಾಲಿ ಜಾಗ ಅಥವಾ ಗ್ರೋ ಬ್ಯಾಗ್‌ಗಳಲ್ಲಿ ಸುಲಭವಾಗಿ ತರಕಾರಿ ಬೆಳೆಸಬಹುದು. ಬೇವಿನ ಎಣ್ಣೆ, ಮೆಣಸಿನಕಾಯಿ–ಬೆಳ್ಳುಳ್ಳಿ ಕಷಾಯ ಸೇರಿದಂತೆ ಜೈವಿಕ ಕೀಟನಾಶಕಗಳ ಬಳಕೆಯಿಂದ ರಾಸಾಯನಿಕ ಅವಲಂಬನೆ ಕಡಿಮೆ ಮಾಡಬಹುದು ಎಂದು ತಿಳಿಸಿದರು.

ಬಾಗಲಕೋಟೆಯ ತೋಟಗಾರಿಕಾ ಮಹಾವಿದ್ಯಾಲಯದ ತರಕಾರಿ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಎಚ್.ಪಿ. ಹಾದಿಮನಿ ಮಾತನಾಡಿ, ಋತುವಿಗೆ ಅನುಗುಣವಾಗಿ ಬೆಂಡೆಕಾಯಿ, ಪಾಲಕ್, ಮೆಂತೆ, ಕೊತ್ತಂಬರಿ ಸೇರಿದಂತೆ ವಿವಿಧ ತರಕಾರಿಗಳನ್ನು ಮನೆಯಲ್ಲೇ ಬೆಳೆಸಿಕೊಳ್ಳುವುದರಿಂದ ಕುಟುಂಬದ ಆರೋಗ್ಯ ಮತ್ತು ಆಹಾರ ಭದ್ರತೆ ಕಾಪಾಡಬಹುದು ಎಂದರು.

ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಶರಣಬಸಪ್ಪ ಗುಡಿಮನಿ ಹಾಗೂ ಗೌರವ ಕಾರ್ಯದರ್ಶಿ ಚನ್ನವೀರಪ್ಪ ಹುಣಸಿಕಟ್ಟಿ ಮಾತನಾಡಿ, ರಾಸಾಯನಿಕಯುಕ್ತ ಆಹಾರದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಸಾವಯವ ಕೃಷಿ ಮತ್ತು ಸಾವಯವ ಆಹಾರದತ್ತ ಜನರು ಒಲವು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಅಕ್ಕನ ಬಳಗದ ಟ್ರಸ್ಟಿ ಅಧ್ಯಕ್ಷೆ ಕಸ್ತೂರಿ ಹಿರೇಗೌಡ್ರ ಮಾತನಾಡಿ, ಪರಿಸರ ಸಂರಕ್ಷಣೆ ಒಂದು ದಿನಕ್ಕೆ ಸೀಮಿತವಾಗದೆ ಜೀವನದ ಭಾಗವಾಗಬೇಕು ಎಂದರು. ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ದಾನಪ್ಪಗೌಡರ ಪ್ರಾಸ್ತಾವಿಕವಾಗಿ ಮಾತನಾಡಿ, ಮನೆಯಲ್ಲೇ ಕೈತೋಟ ನಿರ್ಮಾಣದ ಅಗತ್ಯತೆಯನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಅಕ್ಕನ ಬಳಗದ ಅಧ್ಯಕ್ಷೆ ಜಯಶ್ರೀ ಹುಬ್ಬಳ್ಳಿ, ಕಾರ್ಯದರ್ಶಿ ಜಯಶ್ರೀ ಪಾಟೀಲ, ಸುವರ್ಣಾ ಮದರಿಮಠ, ಸುವರ್ಣಾ ವಸ್ತ್ರದ, ನಾಗರತ್ನ ಹುಬ್ಬಳ್ಳಿಮಠ, ಅನ್ನಪೂರ್ಣ ಮಾಳೆಕೊಪ್ಪಮಠ, ಸುವರ್ಣಾ ಹೊಸಂಗಡಿ, ಪೂರ್ಣಿಮಾ ಆಟದ ಸೇರಿದಂತೆ ಮಹಿಳಾ ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಅಕ್ಕನ ಬಳಗದ ಟ್ರಸ್ಟಿಗಳು ಉಪಸ್ಥಿತರಿದ್ದರು.

“ಪ್ರತಿಯೊಂದು ಮನೆಯಲ್ಲೂ ಒಂದು ಕೈತೋಟ ನಿರ್ಮಿಸಿದರೆ ಕುಟುಂಬಕ್ಕೆ ವಿಷಮುಕ್ತ ಆಹಾರ ದೊರೆಯುವುದರ ಜೊತೆಗೆ ಆರೋಗ್ಯಕರ ಜೀವನಶೈಲಿಯೂ ರೂಢಿಯಾಗುತ್ತದೆ.”

ಡಾ. ಸತೀಶ ಆರ್. ಪಾಟೀಲ, ಮುಖ್ಯ ಪ್ರಾಧ್ಯಾಪಕರು ಮತ್ತು ವಿಶೇಷಾಧಿಕಾರಿ, ತೋಟಗಾರಿಕಾ ಮಹಾವಿದ್ಯಾಲಯ, ಬಾಗಲಕೋಟೆ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img