ಗದಗ: ಗದಗ ಜಿಲ್ಲೆಯಲ್ಲಿ ಅಕ್ರಮ ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸ ಮತ್ತೆ ಬೆಳಕಿಗೆ ಬಂದಿದೆ.
ಸಾಲದ ವಾರದ ಬಡ್ಡಿ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಇಬ್ಬರು ಮಹಿಳೆಯರನ್ನು ಮನೆಯೊಳಗೆ ಕೂಡಿ ಹಾಕಿ ಹಿಗ್ಗಾಮುಗ್ಗಾ ಹಲ್ಲೆ ನಡೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ನರಗುಂದ ತಾಲೂಕಿನ ಶಿರೋಳ ಗ್ರಾಮದ ಘಟನೆ ಇದಾಗಿದ್ದು, ಸಂತ್ರಸ್ತ ಮಹಿಳೆಯರಾದ ಬಸವಣ್ಣೆಮ್ಮ ಅಂಗಡಿ ಮತ್ತು ಮಹಾದೇವಿ ಮಠದ ಅವರು ನ್ಯಾಯಕ್ಕಾಗಿ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಕಣ್ಣೀರು ಸುರಿಸಿದ್ದಾರೆ.
ಆರೋಪಗಳ ಪ್ರಕಾರ, ಅದೇ ಗ್ರಾಮದ ಸಿದ್ದಯ್ಯ ಹೊಸಮನಿ ಹಾಗೂ ಆತನ ಪುತ್ರ ವಿನೋದ್ ಹೊಸಮನಿ ಎಂಬವರು ಈ ಅಕ್ರಮ ಬಡ್ಡಿ ದಂಧೆಯಲ್ಲಿ ತೊಡಗಿದ್ದು, ಮಹಾದೇವಿ ಮಠದ ಅವರಿಗೆ ₹1.50 ಲಕ್ಷ ಸಾಲ ನೀಡಿ ವಾರಕ್ಕೆ ₹4,500 ಬಡ್ಡಿ ವಸೂಲಿ ಮಾಡುತ್ತಿದ್ದರೆ, ಬಸವಣ್ಣೆಮ್ಮ ಅವರಿಗೆ ₹3 ಲಕ್ಷ ಸಾಲ ನೀಡಿ ವಾರಕ್ಕೆ ₹9,000 ಬಡ್ಡಿ ವಸೂಲಿ ಮಾಡುತ್ತಿದ್ದರೆಂದು ಹೇಳಲಾಗಿದೆ.
ಕಳೆದ ಕೆಲವು ತಿಂಗಳಿಂದ ಆರ್ಥಿಕ ಸಂಕಷ್ಟದಿಂದಾಗಿ ಬಡ್ಡಿ ಹಣ ಪಾವತಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮಹಿಳೆಯರನ್ನು ಮನೆಯೊಳಗೆ ಎಳೆದುಕೊಂಡು ಹೋಗಿ, ಬಾಗಿಲು ಹಾಕಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಘಟನೆಯ ಬಳಿಕ ಮಹಿಳೆಯರು ನರಗುಂದ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು ಮುಂದಾದರೂ, ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ಬಳಿಕ ಅವರು ಗದಗ ಎಸ್ಪಿ ಕಚೇರಿಗೆ ತೆರಳಿ ರಕ್ಷಣೆ ಮತ್ತು ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಇತ್ತ ಗದಗ ಜಿಲ್ಲೆಯಲ್ಲಿ ಅಕ್ರಮ ಬಡ್ಡಿ ದಂಧೆ ವಿರುದ್ಧ ಈ ಹಿಂದೆಯೂ ಹಲವು ದಾಳಿಗಳು ನಡೆದಿದ್ದರೂ ಗ್ರಾಮೀಣ ಭಾಗಗಳಲ್ಲಿ ಇಂತಹ ದಂಧೆಗಳು ಮುಂದುವರಿಯುತ್ತಿವೆ ಎಂಬ ಆತಂಕ ಸಾರ್ವಜನಿಕರಲ್ಲಿ ವ್ಯಕ್ತವಾಗಿದೆ.
ಸದ್ಯ ಪ್ರಕರಣದ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದರ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ.



