ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಹತ್ವದ ಕ್ರಮ ಕೈಗೊಂಡಿದೆ.
ಕಸದ ಸಮಸ್ಯೆ ಹೆಚ್ಚು ಕಾಣಿಸುವ ಪ್ರದೇಶಗಳನ್ನು ಗುರುತಿಸಿ, ಅಗತ್ಯವಿರುವೆಡೆ ಸಂಜೆ ವೇಳೆಯಲ್ಲೂ ಆಟೋ ಟಿಪ್ಪರ್ಗಳನ್ನು ನಿಯೋಜಿಸಿ ಕಸವನ್ನು ಸಮಯಕ್ಕೆ ಸರಿಯಾಗಿ ಸಂಗ್ರಹಿಸುವಂತೆ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದ ಸ್ವಚ್ಛತೆ ಕಾಪಾಡುವುದು ಹಾಗೂ ರಸ್ತೆ ಬದಿಯಲ್ಲಿ ಕಸ ಎಸೆಯುವುದನ್ನು ತಡೆಯುವುದು ಅತ್ಯಂತ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ತ್ಯಾಜ್ಯ ನಿರ್ವಹಣೆಯಲ್ಲಿ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯವಾಗಿದ್ದು, ನಾಗರಿಕರು ಜವಾಬ್ದಾರಿಯಾಗಿ ವರ್ತಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಯಾವುದೇ ಪ್ರದೇಶದಲ್ಲಿ ಕಸ ರಾಶಿಯಾಗಿರುವುದು ಅಥವಾ ಆಟೋ ಟಿಪ್ಪರ್ ಸಮಯಕ್ಕೆ ಬಾರದಿರುವುದು ಕಂಡುಬಂದರೆ ತಕ್ಷಣ ನಿಗಮಕ್ಕೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಮಾಹಿತಿ ಬಂದ ಕೂಡಲೇ ಸಂಬಂಧಿತ ಸಿಬ್ಬಂದಿ ಸ್ಥಳಕ್ಕೆ ತೆರಳಿ ಸಮಸ್ಯೆ ಪರಿಹರಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಗರದ ಸ್ವಚ್ಛತಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯವಾಗಿದ್ದು, ನಾಗರಿಕರು ನಿಗಮದೊಂದಿಗೆ ಕೈಜೋಡಿಸಿದಾಗ ಮಾತ್ರ ಶಾಶ್ವತ ಪರಿಹಾರ ಸಾಧ್ಯವಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸ್ವಯಂಸೇವಕರು ಹಾಗೂ ಸಂಘಟನೆಗಳು ರಸ್ತೆ ಬದಿಯಲ್ಲಿ ಕಸ ಎಸೆಯದಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಹಾಗೂ ನಿಯಮ ಉಲ್ಲಂಘಿಸುವವರ ಬಗ್ಗೆ ತಕ್ಷಣ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಕಠಿಣ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಲಾಗಿದೆ.
ಇದರ ಜೊತೆಗೆ, ತ್ಯಾಜ್ಯ ಸಂಗ್ರಹಣೆಯಲ್ಲಿ ತಂತ್ರಜ್ಞಾನ ಬಳಸಿ ಮೇಲ್ವಿಚಾರಣೆಯನ್ನು ಬಲಪಡಿಸಲು ಜಿಬಿಎ ಮುಂದಾಗಿದೆ. ಕಸದ ವಾಹನಗಳ ಚಲನವಲನವನ್ನು ನಿಗಾ ವಹಿಸಲು ‘ಮಾತ್ರ’ ಎಂಬ ಆ್ಯಪ್ ಅನ್ನು ಬಳಸಲಾಗುತ್ತಿದೆ. ಈ ವ್ಯವಸ್ಥೆಯನ್ನು ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಕೋರಮಂಗಲದಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ.
ಈ ಆ್ಯಪ್ ಅನ್ನು ಕಸದ ವಾಹನ ಚಾಲಕರ ಮೊಬೈಲ್ಗಳಲ್ಲಿ ಇನ್ಸ್ಟಾಲ್ ಮಾಡಲಾಗಿದ್ದು, ಅವರು ನಿಗದಿತ ಮಾರ್ಗದಿಂದ ತಪ್ಪಿದರೆ ಅಥವಾ ನಿಯಮ ಉಲ್ಲಂಘಿಸಿದರೆ ತಕ್ಷಣ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಲಿದೆ. ಈ ವ್ಯವಸ್ಥೆ ಯಶಸ್ವಿಯಾದರೆ ಉಳಿದ ನಾಲ್ಕು ನಗರ ಪಾಲಿಕೆಗಳಿಗೂ ವಿಸ್ತರಿಸುವ ಯೋಜನೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



