ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಬಸ್ ನಿಲ್ದಾಣದ ಸಮೀಪ ಜನನಿಬಿಡ ಪ್ರದೇಶದಲ್ಲಿದ್ದ ವಾಣಿಜ್ಯ ಸಂಕೀರ್ಣದ ಮೆಟ್ಟಿಲು ಹಾಗೂ ಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮೃತರನ್ನು ನಾಗರಾಜ್ ಕ್ಯಾದಿಗೇರಾ (26) ಹಾಗೂ ರವಿಕುಮಾರ್ (27) ಎಂದು ಗುರುತಿಸಲಾಗಿದೆ.
ಗಾಯಗೊಂಡಿರುವ ಉಮೇಶ್ ಮತ್ತು ಅಭಿಷೇಕ್ ಅವರನ್ನು ತಕ್ಷಣ ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರತಿನಿತ್ಯದಂತೆ ವಾಣಿಜ್ಯ ಸಂಕೀರ್ಣದಲ್ಲಿನ ಅಂಗಡಿಗಳಲ್ಲಿ ವ್ಯಾಪಾರ-ವಹಿವಾಟು ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಏಕಾಏಕಿ ಕಟ್ಟಡದ ಮೆಟ್ಟಿಲು ಹಾಗೂ ಗೋಡೆ ಕುಸಿದು ಬಿದ್ದಿದ್ದು, ಅದೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ನಾಲ್ವರು ಯುವಕರು ಅವಶೇಷಗಳಡಿ ಸಿಲುಕಿಕೊಂಡರು. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡರು.
ಮಾಹಿತಿ ತಿಳಿಯುತ್ತಿದ್ದಂತೆ ದೇವದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದೇ ವೇಳೆ ದೇವದುರ್ಗ ಶಾಸಕಿ ಕರೆಮ್ಮಾ ನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಕುರಿತು ಪೊಲೀಸರಿಂದ ಮಾಹಿತಿ ಪಡೆದು, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.



