ಮಂಗಳೂರು: ಮಂಗಳೂರಿನ ನಾಗುರಿಯಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ ಇಬ್ಬರು ಪುಟ್ಟ ಬಾಲಕಿಯರು ಸೇರಿ ಮೂವರು ಮೃತಪಟ್ಟ ಪ್ರಕರಣದಲ್ಲಿ ಭಾರಿ ನಿರ್ಲಕ್ಷ್ಯದ ಶಂಕೆ ವ್ಯಕ್ತವಾಗಿದೆ. ಮನೆಯ ಮೇಲೆ ಕುಸಿದ ಕಾಂಪೌಂಡ್ ಗೋಡೆಯೇ ದುರಂತಕ್ಕೆ ಕಾರಣವಾಗಿರಬಹುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಮನೆಯ ಹಿಂಭಾಗದ ಕಾಂಪೌಂಡ್ ಗೋಡೆ ಮಳೆ ನೀರಿನ ಒತ್ತಡಕ್ಕೆ ಕುಸಿದು ನೇರವಾಗಿ ಮನೆಯ ಮೇಲೆ ಬಿದ್ದಿದೆ. ಪರಿಣಾಮ ಮನೆಯೊಳಗಿದ್ದ ಆರು ಮಂದಿ ಮಣ್ಣಿನಡಿ ಸಿಲುಕಿಕೊಂಡರು. ತುರ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಓರ್ವ ಪುರುಷ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಿಸಲಾಗಿದ್ದರೂ, ಓರ್ವ ಮಹಿಳೆ ಹಾಗೂ ನಾಲ್ಕು ವರ್ಷದ ಪರಿ, ಎಂಟು ವರ್ಷದ ಅನಾಮಿಕ ಮೃತಪಟ್ಟಿದ್ದಾರೆ.
ಪರಿ ಮನೆಯ ಮುಂದೆ ಆಟವಾಡುತ್ತಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಂದಮ್ಮನ ದುರಂತ ಸಾವಿಗೆ ಸಾರ್ವಜನಿಕರು ಕಂಬನಿ ಮಿಡಿಯುತ್ತಿದ್ದಾರೆ.
ದುರಂತದ ಬೆನ್ನಲ್ಲೇ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಕಾಂಪೌಂಡ್ ಗೋಡೆಯ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಡೆದಿದೆಯೇ ಎಂಬ ಬಗ್ಗೆ ತಾಂತ್ರಿಕ ತಜ್ಞರಿಂದ ಪರಿಶೀಲನೆ ಆರಂಭಿಸಲಾಗಿದೆ. ಅನಧಿಕೃತ ಗುಡ್ಡ ಅಗೆತ ಅಥವಾ ಕಾಮಗಾರಿ ದೋಷ ಪತ್ತೆಯಾದರೆ ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಜಿಲ್ಲಾಧಿಕಾರಿ ನಿಧಿಯಿಂದ ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದ್ದು, ಪ್ರಕರಣದ ಎಲ್ಲ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.



