ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ವ್ಯಾಪಾರಿ ಮಳಿಗೆಗಳ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.
ರೋಣ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ ಪಾಟೀಲ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ನರೇಗಲ್ಲ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿದ್ದರೂ ವಾಣಿಜ್ಯ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಬೇಕಿದೆ. ಪಟ್ಟಣದ ವ್ಯಾಪಾರೋದ್ಯಮಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಶಾಸಕ ಜಿ.ಎಸ್. ಪಾಟೀಲ ಅವರಿಂದ ಸಂಪೂರ್ಣ ಸಹಕಾರ ದೊರೆಯಲಿದೆ ಎಂದು ಹೇಳಿದರು.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ರೋಣದ ಮಹಾಲಕ್ಷ್ಮಿ ಕನ್ಸ್ಟ್ರಕ್ಷನ್ ಸಹಯೋಗದಲ್ಲಿ ಮಳಿಗೆಗಳ ನಿರ್ಮಾಣ ನಡೆಯಲಿದ್ದು, ಶೀಘ್ರದಲ್ಲೇ ವ್ಯಾಪಾರಸ್ಥರಿಗೆ ಮಳಿಗೆಗಳನ್ನು ಹಂಚಿಕೆ ಮಾಡಲಾಗುವುದು. ಈ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಂಡು ವ್ಯಾಪಾರಸ್ಥರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪಪಂ ಮುಖ್ಯಾಧಿಕಾರಿ ಮಲ್ಲೇಶ ಪಚ್ಚಿ, ಕೆಪಿಸಿಸಿ ಸದಸ್ಯ ಸಂಜಯ ದೊಡ್ಡಮನಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಪ್ಪ ಬೆಟಗೇರಿ, ಎಂ.ಎಸ್. ಧಡೇಸೂರಮಠ, ಕರವೇ ಜಿಲ್ಲಾಧ್ಯಕ್ಷ ಹನುಮಂತಪ್ಪ ಅಬ್ಬಿಗೇರಿ, ಶೇಖಪ್ಪ ಜುಟ್ಲದ, ಸಂತೋಷ ಹನುಮಸಾಗರ, ಸದ್ದಾಂ ನಶೇಖಾನ, ಅಲ್ಲಾಬಕ್ಷಿ ನದಾಫ್, ನಿಂಗನಗೌಡ ಲಕ್ಕನಗೌಡ್ರ, ಕಳಕನಗೌಡ ಪೊಲೀಸ್ ಪಾಟೀಲ, ಶೇಖಪ್ಪ ಕೆಂಗಾರ, ಎ.ಎ. ನವಲಗುಂದ, ಗುತ್ತಿಗೆದಾರ ಮಲ್ಲೇಶ ಯಾದವಾಡ, ಐ.ಎಚ್. ಅಣ್ಣಿಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.



