For Dai;y Updates Join Our whatsapp Group
ಬೆಂಗಳೂರು/ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣ ಗ್ರಾಮದ ಬಳಿ ಇರುವ ಕಲ್ಲು ಕ್ವಾರಿಯಲ್ಲಿ ಭೀಕರ ದುರ್ಘಟನೆ ಸಂಭವಿಸಿದ್ದು, ಬಂಡೆ ಕುಸಿದು 7 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಾವೇರಿ ಕಂಪನಿಗೆ ಸೇರಿದ ಕ್ವಾರಿಯಲ್ಲಿ ಇಂದು ಬೆಳಗ್ಗೆ ಕೆಲಸ ನಡೆಯುತ್ತಿದ್ದ ವೇಳೆ ಮೇಲಿನಿಂದ ಬಂಡೆ ಕುಸಿದು ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ. ಈ ವೇಳೆ ಹಲವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, 100 ಅಡಿ ಎತ್ತರದಲ್ಲಿ ಹಿಟಾಚಿ ಯಂತ್ರದ ಮೂಲಕ ಕ್ವಾರಿ ಕ್ಲಿಯರ್ ಮಾಡುವ ಕೆಲಸ ನಡೆಯುತ್ತಿತ್ತು. ಹೊಸ ಕ್ರಷರ್ ಕಾರ್ಯಾರಂಭಕ್ಕಾಗಿ ಸ್ಥಳವನ್ನು ಸ್ವಚ್ಛಗೊಳಿಸಲಾಗುತ್ತಿತ್ತು. ಇದೇ ವೇಳೆ ಕೆಳಭಾಗದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರೆಂದು ಹೇಳಲಾಗಿದೆ.
ಹಿಟಾಚಿ ಚಾಲಕ ಮೇಲಿನ ಬಂಡೆಗಳನ್ನು ಕೆಳಗೆ ತಳ್ಳಿದ ಪರಿಣಾಮ ಅವು ನೇರವಾಗಿ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿವೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಈ ದುರ್ಘಟನೆಯಲ್ಲಿ 7 ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಬಿಹಾರ ಮೂಲದ ಕೂಲಿ ಕಾರ್ಮಿಕರು ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ತಾವರೆಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.