ವಿಜಯಸಾಕ್ಷಿ ಸುದ್ದಿ, ರೋಣ: ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಬೂತ್ ಮಟ್ಟದಿಂದಲೇ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಕೆಲಸಕ್ಕೆ ಈಗಿನಿಂದಲೇ ಮುಂದಾಗಬೇಕು ಎಂದು ಬಿಜೆಪಿ ರೋಣ ಮಂಡಲದ ಮಾಜಿ ಅಧ್ಯಕ್ಷ ಮುತ್ತಣ್ಣ ಕಡಗದ ಹೇಳಿದರು.
ಸವಡಿ ಗ್ರಾಮದ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಸಂಘಟನಾತ್ಮಕ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮಾಜಿ ಶಾಸಕ ಕಳಕಪ್ಪ ಬಂಡಿಯವರ ಕೊಡುಗೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಹೇಳಿದರು.
ಕಳಕಪ್ಪ ಬಂಡಿಯವರು ಕ್ಷೇತ್ರದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದು, ರಸ್ತೆ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಅನುದಾನ ತಂದು ಸಾಮಾಜಿಕ ಬದ್ಧತೆಯಿಂದ ಕೆಲಸ ಮಾಡಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳನ್ನು ಮನೆಮನೆಗೆ ತಲುಪಿಸುವ ಮೂಲಕ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಬೇಕು ಎಂದು ಕರೆ ನೀಡಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಯಾವುದೇ ಸಮಯದಲ್ಲಿ ಘೋಷಣೆಯಾಗುವ ಸಾಧ್ಯತೆ ಇರುವುದರಿಂದ ಕಾರ್ಯಕರ್ತರು ಈಗಿನಿಂದಲೇ ಸಂಘಟನೆಗೆ ಒತ್ತು ನೀಡಿ ಗೆಲುವಿನ ಗುರಿಯೊಂದಿಗೆ ಕೆಲಸ ಮಾಡಬೇಕು. ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಜವಾಬ್ದಾರಿಯನ್ನೂ ಕಾರ್ಯಕರ್ತರು ವಹಿಸಬೇಕು ಎಂದರು.
ಸಭೆಯಲ್ಲಿ ಅಶೋಕ ಪವಾಡಶೆಟ್ಟರ, ಶಂಕ್ರಯ್ಯ ಹಿರೇಮಠ, ಸಿ.ಎಸ್. ಗದಗ, ಕೂಡ್ಲೆಪ್ಪ ದಂಡಿನ, ಮಹ್ಮದ್ ತರಪದಾರ, ಸಚಿನ್ ಪಾಟೀಲ, ಪರಪ್ಪ ಹೊನ್ನಾಪುರ, ಸಂಗಮೇಶ ಬೆಳವಡಿ, ಅಂದಪ್ಪ ಕಡಿಯವರ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



