ವಿಜಯಸಾಕ್ಷಿ ಸುದ್ದಿ, ಗದಗ: ಕಾಲಗರ್ಭದಲ್ಲಿ ಮರೆಯಾಗುತ್ತಿದ್ದ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂಶೋಧಿಸಿ, ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ಅಮೂಲ್ಯ ಪರಂಪರೆಯನ್ನು ಉಳಿಸಿಕೊಟ್ಟ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿಯವರ ಸೇವೆ ಅನನ್ಯ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.
ನಗರದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘ ಆಯೋಜಿಸಿದ್ದ 2804ನೇ ಶಿವಾನುಭವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಕನ್ನಡ ನಾಡು-ನುಡಿಯನ್ನು ಶ್ರೀಮಂತಗೊಳಿಸುವಲ್ಲಿ ವಚನ ಸಾಹಿತ್ಯದ ಪಾತ್ರ ಅಪಾರವಾಗಿದೆ. ಶರಣರ ತತ್ವಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿದ್ದು, ಮಾನವೀಯ ಮೌಲ್ಯಗಳ ನೆಲೆಗಟ್ಟಾಗಿ ಉಳಿದಿವೆ ಎಂದು ಹೇಳಿದರು.
ಮುಖ್ಯ ಉಪನ್ಯಾಸ ನೀಡಿದ ವಿಜಯಪುರದ ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಎಂ.ಎಸ್. ಮದಭಾವಿ, ಹಳಕಟ್ಟಿಯವರು ತಮ್ಮ ವೈಯಕ್ತಿಕ ಸುಖವನ್ನು ತ್ಯಜಿಸಿ ಸಮಾಜಕ್ಕಾಗಿ ಬದುಕಿದ ಮಹನೀಯರು. ವಚನ ಸಾಹಿತ್ಯ ಉಳಿವಿಗಾಗಿ ತಮ್ಮ ಆಸ್ತಿಯನ್ನೇ ಮಾರಿಕೊಂಡು ಜೀವನವನ್ನೇ ಸಮರ್ಪಿಸಿದ ಅವರ ತ್ಯಾಗ ಇತಿಹಾಸದಲ್ಲಿ ಅಜರಾಮರವಾಗಿದೆ ಎಂದು ಹೇಳಿದರು.
ಶಿವಾನುಭವದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ ಮಾಜಿ ಅಧ್ಯಕ್ಷ ಡಾ. ಜಿ.ಬಿ. ಪಾಟೀಲ ದಂಪತಿಯನ್ನು ಸನ್ಮಾನಿಸಲಾಯಿತು. ಬಳ್ಳಾರಿಯ ಡಾ. ತಿಪ್ಪೇರುದ್ರ ಸಂಡೂರ ಅವರ ‘ಭುವಿಯ ಬೆಳಕು ಬಸವಣ್ಣ’ ಕೃತಿಯನ್ನು ಲೋಕಾರ್ಪಣೆ ಮಾಡಲಾಯಿತು. ಉತ್ತರಾಖಂಡದ ಉತ್ತರಕಾಶಿಯ ಟೆರ್ರಾಕೋಟ್ ಶಿಖರವನ್ನು ಆರೋಹಣ ಮಾಡಿದ ಗದಗ ಜಿಲ್ಲೆಯ ಸೃಷ್ಟಿ ಉಮೇಶ ಮೇಟಿ, ಅಶ್ವಿನಿ ತಿರ್ಲಾಪೂರ ಹಾಗೂ ಜಯಲಕ್ಷ್ಮಿ ಸಿ. ಹೊಳೆಯಾಚೆ ಅವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಡಾ. ಉಮೇಶ ಪುರದ, ಶಿವಾನುಭವ ಸಮಿತಿ ಅಧ್ಯಕ್ಷ ರಮೇಶ ಕಲ್ಲನಗೌಡರ, ಪ್ರಭು ಗಂಜಿಹಾಳ, ಸಿದ್ಧರಾಮ ಪಟ್ಟೇದ, ಪ್ರತಿಭಾ ಬಡ್ನಿ, ವೀರಣ್ಣ ಗೋಟಡಕಿ ಸೇರಿದಂತೆ ಸಂಘದ ಪದಾಧಿಕಾರಿಗಳು, ಭಕ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
“ಕನ್ನಡ ನಾಡು-ನುಡಿಗೆ ವಚನ ಸಾಹಿತ್ಯವೇ ಜೀವಾಳ. ಸೌಹಾರ್ದಯುತ, ಸುಂದರ ಸಮಾಜ ನಿರ್ಮಾಣವಾಗಬೇಕಾದರೆ ವಚನಗಳನ್ನು ಕೇವಲ ಓದುವುದಲ್ಲ, ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು.”
ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು



