HomeIndia Newsಪತಿ ಕೊಲೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ...

ಪತಿ ಕೊಲೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ!

For Dai;y Updates Join Our whatsapp Group

ನವದೆಹಲಿ: ಹನಿಮೂನ್ ವೇಳೆ ಪತಿ ರಾಜಾ ರಘುವಂಶಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸೋನಂ ರಘುವಂಶಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಪಡಿಸುವಂತೆ ಮೇಘಾಲಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸುವಂತೆ ಮೇಘಾಲಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಹಾಗೂ ಶೀಲ್ ನಾಗು ಅವರಿದ್ದ ಪೀಠವು ವಿಚಾರಣೆ ನಡೆಸಿತು. ಆರಂಭದಲ್ಲಿ ಸೋನಂಗೆ ನೀಡಿದ್ದ ಜಾಮೀನಿನ ಆದೇಶಕ್ಕೆ ತಡೆ ನೀಡುವ ಬಗ್ಗೆ ನ್ಯಾಯಪೀಠ ಒಲವು ತೋರಿದರೂ, ಆರೋಪಿ ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆಯಾಗಿರುವುದು ಹಾಗೂ ಪ್ರಕರಣದ ಸತ್ಯಾಸತ್ಯತೆ ವಿಚಾರಣೆಯ ವೇಳೆ ನಿರ್ಧಾರವಾಗಬೇಕಿರುವುದರಿಂದ ಹೈಕೋರ್ಟ್ ಆದೇಶವನ್ನು ಹಿಂಪಡೆಯಲು ನಿರಾಕರಿಸಿತು. ಆದರೆ, ಜಾಮೀನು ನೀಡಿದ ಆದೇಶವನ್ನು ಕಾನೂನುಬದ್ಧವಾಗಿ ಪರಿಶೀಲಿಸಲು ನ್ಯಾಯಾಲಯ ಒಪ್ಪಿಗೆ ಸೂಚಿಸಿದೆ.

ವಿಚಾರಣೆ ವೇಳೆ ಮೇಘಾಲಯ ಸರ್ಕಾರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಬಂಧನದ ವೇಳೆ ಕಾರಣಗಳನ್ನು ಸಮರ್ಪಕವಾಗಿ ತಿಳಿಸಿಲ್ಲ ಎಂಬ ಆಧಾರದ ಮೇಲೆ ಸೋನಂ ಸಲ್ಲಿಸಿದ್ದ ಹಿಂದಿನ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ತಿರಸ್ಕರಿಸಿತ್ತು. ನಂತರ ಪೊಲೀಸರು ದಾಖಲೆಗಳನ್ನು ಸಿದ್ಧಪಡಿಸುವಾಗ ಸಂಭವಿಸಿದ ಸಣ್ಣ ತಾಂತ್ರಿಕ ಲೋಪವನ್ನೇ ಆಧಾರವಾಗಿಟ್ಟುಕೊಂಡು ಹೈಕೋರ್ಟ್ ಜಾಮೀನು ನೀಡಿದೆ ಎಂದು ವಾದಿಸಿದರು.

ಈ ವೇಳೆ ಸುಪ್ರೀಂಕೋರ್ಟ್, ಸೋನಂ ಈಗಾಗಲೇ ಕೆಲವು ಕಾಲ ಜೈಲಿನಲ್ಲಿ ಕಳೆದಿರುವುದನ್ನು ಪರಿಗಣಿಸಿದೆ. ಅಪರಾಧದ ಸ್ವರೂಪ ಗಂಭೀರವಾಗಿದ್ದರೂ, “ಜಾಮೀನು ನಿಯಮ, ಜೈಲು ಅಪವಾದ” ಎಂಬ ನ್ಯಾಯತತ್ವವನ್ನು ಅನುಸರಿಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿತು. ಇದೇ ವೇಳೆ, ಪ್ರಕರಣವನ್ನು ಹೈಕೋರ್ಟ್ ನಿರ್ವಹಿಸಿದ ವಿಧಾನ ಕುರಿತು ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ಜುಲೈ 9ಕ್ಕೆ ನಿಗದಿಪಡಿಸಿದೆ.

ಪ್ರಕರಣದ ಹಿನ್ನೆಲೆ: ಮಧ್ಯಪ್ರದೇಶದ ಇಂದೋರ್ ನಿವಾಸಿಗಳಾದ ರಾಜಾ ರಘುವಂಶಿ ಮತ್ತು ಸೋನಂ ರಘುವಂಶಿ 2025ರ ಮೇ 23ರಂದು ಮೇಘಾಲಯದ ಸೋಹ್ರಾ ಪ್ರದೇಶಕ್ಕೆ ಹನಿಮೂನ್‌ಗೆ ತೆರಳಿದ್ದರು. ಬಳಿಕ ಇಬ್ಬರೂ ನಾಪತ್ತೆಯಾಗಿದ್ದು, ಜೂನ್ 2ರಂದು ರಾಜಾ ರಘುವಂಶಿ ಅವರ ಮೃತದೇಹ ಆಳವಾದ ಕಂದಕದಲ್ಲಿ ಪತ್ತೆಯಾಗಿತ್ತು.

ಈ ಪ್ರಕರಣದಲ್ಲಿ ಪತ್ನಿ ಸೋನಂ ರಘುವಂಶಿಯೇ ಪ್ರಮುಖ ಆರೋಪಿಯಾಗಿದ್ದು, ಆರ್ಥಿಕ ಲಾಭದ ಉದ್ದೇಶದಿಂದ ಬಾಡಿಗೆ ಹಂತಕರ ನೆರವಿನಿಂದ ಪತಿಯ ಕೊಲೆಗೆ ಸಂಚು ರೂಪಿಸಿದ್ದಾಳೆ ಎಂದು ಮೇಘಾಲಯ ಪೊಲೀಸರು ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ಕಳೆದ ವರ್ಷದ ಜೂನ್‌ನಲ್ಲಿ ಸೋನಂ ಅವರನ್ನು ಬಂಧಿಸಲಾಗಿತ್ತು.

ನಂತರ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನನ್ನು ಮೇಘಾಲಯ ಹೈಕೋರ್ಟ್ ಎತ್ತಿಹಿಡಿದಿತ್ತು. ಬಂಧನ ವಾರಂಟ್ ಹಾಗೂ ಆರೋಪಗಳ ವಿವರಗಳನ್ನು ಪೊಲೀಸರು ಸಮರ್ಪಕವಾಗಿ ದಾಖಲಿಸದಿರುವುದು ಸೇರಿದಂತೆ ತನಿಖೆಯಲ್ಲಿ ತಾಂತ್ರಿಕ ಲೋಪಗಳಿವೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು. ಇದೇ ಆದೇಶವನ್ನು ಪ್ರಶ್ನಿಸಿ ಮೇಘಾಲಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img