ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್-2026) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಕೈ ತಪ್ಪದಂತೆ ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದು ಮಾಜಿ ಶಾಸಕ ಭೀಮಾನಾಯಕ್ ಕರೆ ನೀಡಿದರು.
ಪಟ್ಟಣದ ಅಶೋಕ ಫಾರ್ಮ್ ಹೌಸ್ನಲ್ಲಿ ಆಯೋಜಿಸಿದ್ದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ವಿಷಯ ದೇಶಾದ್ಯಂತ ಚರ್ಚೆಯಾಗುತ್ತಿದ್ದು, ಪ್ರತಿಯೊಬ್ಬರೂ ಇದರ ಬಗ್ಗೆ ಆಸಕ್ತಿ ವಹಿಸಬೇಕು ಎಂದು ಹೇಳಿದರು.
ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಸಾವಿರಾರು ಮತದಾರರ ಹೆಸರುಗಳು ಪಟ್ಟಿಯಿಂದ ಕೈ ತಪ್ಪಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ದೇಶದ ಪ್ರತಿಯೊಬ್ಬ ಮತದಾರರು ಜಾಗೃತರಾಗಿರಬೇಕು ಎಂದರು. ವಿಶೇಷವಾಗಿ ಅಲ್ಪಸಂಖ್ಯಾತರು ಹಾಗೂ ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ಜನರ ಮತಗಳ ಬಗ್ಗೆ ಹೆಚ್ಚಿನ ನಿಗಾ ವಹಿಸುವ ಅಗತ್ಯವಿದೆ ಎಂದು ತಿಳಿಸಿದರು.
ವಿಧಾನಸಭಾ ಕ್ಷೇತ್ರದಲ್ಲಿ ಬಿಎಲ್ಎ-1 ಹಾಗೂ ಬಿಎಲ್ಎ-2ಗಳನ್ನು ನೇಮಕ ಮಾಡಲಾಗಿದ್ದು, ಅವರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಗುವುದು. ಪ್ರತಿಯೊಂದು ಬೂತ್ ವ್ಯಾಪ್ತಿಯ ಕಾರ್ಯಕರ್ತರು ಗ್ರಾಮ ಮಟ್ಟದಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಎಸ್ಐಆರ್ ಕುರಿತು ಟಂಟಂ ಮೂಲಕ ಜಾಗೃತಿ ಮೂಡಿಸಬೇಕು, ಗ್ರಾಮಗಳಲ್ಲಿ ಫ್ಲೆಕ್ಸ್ ಅಳವಡಿಸಬೇಕು ಹಾಗೂ ಮತದಾರರ ಪಟ್ಟಿಯ ಪ್ರತಿಯನ್ನು ಪಡೆದು ಸಂರಕ್ಷಿಸಿಕೊಳ್ಳಬೇಕು ಎಂದು ಸೂಚಿಸಿದರು.
ಚುನಾವಣೆಯ ವೇಳೆ ಮತದಾರರ ಹೆಸರು ಪಟ್ಟಿಯಲ್ಲಿ ಕಾಣಿಸದಿದ್ದರೆ, ಅದರ ವಿರುದ್ಧ ಕಾನೂನು ಹೋರಾಟ ನಡೆಸಲು ಈ ದಾಖಲೆಗಳು ಸಹಕಾರಿಯಾಗಲಿವೆ. ಆದ್ದರಿಂದ ಕೇವಲ ಕಾಂಗ್ರೆಸ್ ಪಕ್ಷದ ಮತದಾರರಷ್ಟೇ ಅಲ್ಲ, ಎಲ್ಲ ಪಕ್ಷಗಳ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಕೈ ತಪ್ಪದಂತೆ ಕಾರ್ಯಕರ್ತರು ಪಕ್ಷಾತೀತವಾಗಿ ಕೆಲಸ ಮಾಡಬೇಕು ಎಂದು ಭೀಮಾನಾಯಕ್ ಕರೆ ನೀಡಿದರು.
ಇದಕ್ಕೂ ಮುನ್ನ ಎಸ್ಐಆರ್ ಕುರಿತು ಡಿಜಿಟಲ್ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಲಾಯಿತು. ಬಳಿಕ ಬಿಎಲ್ಎ ಕಾರ್ಯಕರ್ತರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕುರಿಶಿವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋರಿ ಗೋಣಿಬಸಪ್ಪ, ಅಕ್ಕಿ ತೋಟೇಶ, ಪತ್ರೇಶ್ ಹಿರೇಮಠ, ಲ್ಯಾಂಡ್ ಆರ್ಮಿ ದೇವೇಂದ್ರ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಸಾಹಿರಾಬಾನು, ಉಪಾಧ್ಯಕ್ಷೆ ಯಶೋಧ ಮಂಜುನಾಥ, ಹಾಲ್ದಾಳ್ ವಿಜಯಕುಮಾರ್, ಗುಂಡ್ರ ಹನುಮಂತಪ್ಪ, ಎಂ. ಮರಿ ರಾಮಪ್ಪ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗುರುಬಸವರಾಜ ಸೊನ್ನದ, ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಜಂದಿಸಾಬ್ ಸೇರಿದಂತೆ ಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ 500ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
“ಯಾವುದೇ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈ ತಪ್ಪದಂತೆ ಪಕ್ಷಾತೀತವಾಗಿ ನಿಗಾ ವಹಿಸಬೇಕು. ಮತದಾನದ ಹಕ್ಕು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.”
— ಭೀಮಾನಾಯಕ್, ಮಾಜಿ ಶಾಸಕ



