ಬೆಂಗಳೂರು: ನಗರದ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರುತಿನಗರದಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬಂಧಿತರಲ್ಲಿ ಸೋಮಶೇಖರ್ ಹಾಗೂ ಅಂಬರೀಶ್ ಸೇರಿದಂತೆ ಐವರು ಇದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸಂತ್ರಸ್ತೆಗೆ ಆರೋಪಿಗಳ ಪೈಕಿ ಇಬ್ಬರ ಪರಿಚಯವಿತ್ತು ಎಂದು ತಿಳಿದುಬಂದಿದೆ.
ಪೊಲೀಸರ ಮಾಹಿತಿ ಪ್ರಕಾರ, ಸೆಕ್ಯೂರಿಟಿ ಸೇವೆ ಒದಗಿಸುವ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಸೋಮಶೇಖರ್, ಕಲಬುರಗಿ ಭಾಗದಿಂದ ಸ್ನೇಹಿತರು ಬಂದಿದ್ದಾರೆ, ಅವರನ್ನು ಭೇಟಿ ಮಾಡೋಣ ಎಂದು ಹೇಳಿ ದೇವನಹಳ್ಳಿ ಭಾಗದಲ್ಲಿ ವಾಸವಿದ್ದ ಯುವತಿಯನ್ನು ಮಾರುತಿನಗರಕ್ಕೆ ಕರೆಸಿಕೊಂಡಿದ್ದಾನೆ.
ಸಂಜೆ ಸುಮಾರು 5 ಗಂಟೆ ವೇಳೆಗೆ ಸೋಮಶೇಖರ್ ಯುವತಿಗೆ ಕರೆ ಮಾಡಿದ್ದು, ಬಳಿಕ ಸಂಜೆ 7 ಗಂಟೆ ಸುಮಾರಿಗೆ ಯುವತಿ ರ್ಯಾಪಿಡೋ ಮೂಲಕ ಮಾರುತಿನಗರಕ್ಕೆ ಆಗಮಿಸಿದ್ದಳು. ಬಳಿಕ ಆರೋಪಿಗಳು ಹಾಗೂ ಯುವತಿ ಒಟ್ಟಿಗೆ ಪಾರ್ಟಿ ನಡೆಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಅಂಬರೀಶ್ ಎಂಬಾತ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಪರಿಸ್ಥಿತಿಯನ್ನು ಅರಿತ ಯುವತಿ ಆರೋಪಿಗಳಿಂದ ತಪ್ಪಿಸಿಕೊಂಡು ತಕ್ಷಣವೇ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.
ಮಾಹಿತಿ ಪಡೆದ ತಲಘಟ್ಟಪುರ ಪೊಲೀಸರು ಕೂಡಲೇ ಸ್ಥಳಕ್ಕೆ ದೌಡಾಯಿಸಿ ಐವರು ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಘಟನೆಯ ಎಲ್ಲಾ ಆಯಾಮಗಳ ಕುರಿತು ತನಿಖೆ ನಡೆಸಲಾಗುತ್ತಿದೆ.



