ಹಾಸನ/ಬೆಳಗಾವಿ: ಕರ್ನಾಟಕದ ಹಲವೆಡೆ ಮಳೆ ಮುಂದುವರಿದಿದ್ದು, ಹಾಸನ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಅವಾಂತರಗಳು ಸಂಭವಿಸಿವೆ.
ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ಗಾಳಿ–ಮಳೆಗೆ ದೊಡ್ಡ ತಡೆಗೋಡೆ ಕುಸಿದು ಎರಡು ಮನೆಗಳು ಜಖಂಗೊಂಡಿವೆ. ಅರೇಹಳ್ಳಿ ಬೀದಿಯ ಡಾಲರ್ಸ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಮಧು ಮತ್ತು ಅಬ್ದುಲ್ ಮುನಾಫ್ ಅವರ ಮನೆಗಳಿಗೆ ಹಾನಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಎಲ್ಲರೂ ಸುರಕ್ಷಿತರಾಗಿದ್ದಾರೆ.
ಬೆಳಗಾವಿ ನಗರದಲ್ಲೂ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಸಮಸ್ಯೆಗಳು ಹೆಚ್ಚಾಗಿವೆ. ಸಬಾಗ್ನ ಉಪ್ಪಾರ ಗಲ್ಲಿಯಲ್ಲಿ ಬೃಹತ್ ಹುಣಸೆ ಮರ ಬಿದ್ದು ನಾಲ್ಕು ಮನೆಗಳಿಗೆ ಹಾನಿಯಾಗಿದೆ. ಈ ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ. ಮರ ಬೀಳುವ ವೇಳೆ ಮಹಿಳೆಯೊಬ್ಬರು ಹತ್ತಿರದಲ್ಲೇ ಇದ್ದರೂ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಅನಿಲ್ ಮುಟ್ಕೇಕರ್ ಅವರ ಮನೆಯ ಗೋಡೆ ಕುಸಿದಿದೆ. ಇತರ ಕೆಲವು ಮನೆಗಳಿಗೂ ಹಾನಿಯಾಗಿದೆ. ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ಮರ ತೆರವು ಮಾಡಿದ್ದಾರೆ.
ಇದೇ ವೇಳೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಇರುವ ಡೆಲ್ಟಾ ಫಾಲ್ಸ್ಗೆ ಪ್ರವಾಸಿಗರ ಪ್ರವೇಶವನ್ನು ಅರಣ್ಯ ಇಲಾಖೆ ನಿಷೇಧಿಸಿದೆ. ಮಳೆ ಹೆಚ್ಚಾದ ಕಾರಣ ಜಲಪಾತಕ್ಕೆ ಜೀವ ಬಂದಿದೆ. ಆದರೆ ಪ್ರವಾಸಿಗರು ಅಪಾಯಕಾರಿಯಾಗಿ ವರ್ತಿಸುತ್ತಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ.
ಜಲಪಾತಕ್ಕೆ ಹೋಗುವ ಮಾರ್ಗಗಳನ್ನು ಬಂದ್ ಮಾಡಲಾಗಿದ್ದು, ಅರಣ್ಯ ಸಿಬ್ಬಂದಿ ಕಾವಲು ನಿಂತಿದ್ದಾರೆ. ನಿಯಮ ಉಲ್ಲಂಘಿಸಿದರೆ ಎಫ್ಐಆರ್ ದಾಖಲಿಸುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ.



