ಬೆಂಗಳೂರು: ಮುಂಗಾರು ಮಳೆಯ ಕೊರತೆಯಿಂದ ರಾಜಧಾನಿಯಲ್ಲಿ ನೀರಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮೂರು ಮಹತ್ವದ ಆದೇಶಗಳನ್ನು ಜಾರಿಗೊಳಿಸಿದೆ ಎಂದು ಜಲಮಂಡಳಿ ಅಧ್ಯಕ್ಷೆ ಡಾ. ಮಂಜುಳಾ ತಿಳಿಸಿದ್ದಾರೆ.
ನಗರದಲ್ಲಿ ನೀರಿನ ಸಮರ್ಪಕ ನಿರ್ವಹಣೆ, ಮಿತವ್ಯಯದ ಬಳಕೆ ಹಾಗೂ ದೀರ್ಘಾವಧಿಯ ಜಲ ಭದ್ರತೆಯನ್ನು ಖಚಿತಪಡಿಸುವ ಉದ್ದೇಶದಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಏರೇಟರ್ ಅಳವಡಿಕೆ ಕಡ್ಡಾಯ
ಮನೆಗಳು, ಅಪಾರ್ಟ್ಮೆಂಟ್ಗಳು, ವಾಣಿಜ್ಯ ಕಟ್ಟಡಗಳು, ಸರ್ಕಾರಿ ಕಚೇರಿಗಳು, ಹೋಟೆಲ್ಗಳು ಹಾಗೂ ಕೈಗಾರಿಕೆಗಳು ಸೇರಿದಂತೆ ನೀರು ಬಳಸುವ ಎಲ್ಲಾ ಕಟ್ಟಡಗಳಲ್ಲಿ ಏರೇಟರ್ (Flow Restrictor/Aerator) ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಏರೇಟರ್ ಬಳಕೆಯಿಂದ ನೀರಿನ ಬಳಕೆ ಶೇ.30ರಿಂದ 50ರವರೆಗೆ ಕಡಿಮೆಯಾಗಲಿದ್ದು, ಬಳಕೆದಾರರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಜಲಮಂಡಳಿ ತಿಳಿಸಿದೆ.
ಕುಡಿಯುವ ನೀರಿನ ದುರ್ಬಳಕೆಗೆ ನಿರ್ಬಂಧ
ವಾಹನ ತೊಳೆಯುವುದು, ಉದ್ಯಾನಗಳಿಗೆ ನೀರು ಹಾಯಿಸುವುದು, ರಸ್ತೆ ಮತ್ತು ಪಾದಚಾರಿ ಮಾರ್ಗಗಳ ಸ್ವಚ್ಛತೆ, ಕಟ್ಟಡ ನಿರ್ಮಾಣ ಕಾಮಗಾರಿಗಳು ಸೇರಿದಂತೆ ಕುಡಿಯುವ ನೀರಲ್ಲದ ಉದ್ದೇಶಗಳಿಗೆ ಶುದ್ಧ ಕುಡಿಯುವ ನೀರನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಇಂತಹ ಅಗತ್ಯಗಳಿಗೆ ಕಡ್ಡಾಯವಾಗಿ ಸಂಸ್ಕರಿತ ನೀರನ್ನು ಬಳಸುವಂತೆ ಸೂಚಿಸಲಾಗಿದೆ.
ಈಜುಕೊಳಗಳಿಗೆ ಕುಡಿಯುವ ನೀರು ನಿಷೇಧ
ನಗರದ ಖಾಸಗಿ ಹಾಗೂ ಸಾರ್ವಜನಿಕ ಈಜುಕೊಳಗಳನ್ನು ಕುಡಿಯುವ ನೀರಿನಿಂದ ತುಂಬಿಸುವುದಕ್ಕೂ ನಿರ್ಬಂಧ ಹೇರಲಾಗಿದೆ. ಈಜುಕೊಳಗಳಿಗೆ ಅಗತ್ಯವಿರುವ ನೀರನ್ನು ಸಂಸ್ಕರಿತ ನೀರು ಅಥವಾ ಇತರೆ ಪರ್ಯಾಯ ಮೂಲಗಳಿಂದಲೇ ಪಡೆಯಬೇಕು ಎಂದು ಆದೇಶಿಸಲಾಗಿದೆ.
ನಿಯಮ ಉಲ್ಲಂಘಿಸಿದರೆ ದಂಡ
ಈ ಆದೇಶಗಳನ್ನು ಉಲ್ಲಂಘಿಸುವವರ ವಿರುದ್ಧ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ–1964ರ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಜಲಮಂಡಳಿ ಸರಬರಾಜು ಮಾಡುತ್ತಿರುವ ನೀರಿನ ಪ್ರಮಾಣದಲ್ಲಿ ಶೇ.50ರವರೆಗೆ ಕಡಿತಗೊಳಿಸುವುದರ ಜೊತೆಗೆ ₹5,000 ದಂಡ ವಿಧಿಸಲಾಗುತ್ತದೆ. ಉಲ್ಲಂಘನೆ ಮುಂದುವರಿದರೆ ಪ್ರತಿದಿನ ₹500 ಹೆಚ್ಚುವರಿ ದಂಡ ವಿಧಿಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಡಾ. ಮಂಜುಳಾ, “ಕುಡಿಯುವ ನೀರು ಪ್ರತಿಯೊಬ್ಬರಿಗೂ ಸೇರಿದ ಅಮೂಲ್ಯ ನೈಸರ್ಗಿಕ ಸಂಪತ್ತು. ಅದರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಬೇಕು, ಏರೇಟರ್ ಅಳವಡಿಸಬೇಕು ಹಾಗೂ ಕುಡಿಯುವ ನೀರಿನ ದುರ್ಬಳಕೆ ತಪ್ಪಿಸಿ ಜಲ ಸಂರಕ್ಷಣೆಯ ಜನಾಂದೋಲನಕ್ಕೆ ಕೈಜೋಡಿಸಬೇಕು” ಎಂದು ಮನವಿ ಮಾಡಿದ್ದಾರೆ.



