ಬಂಟ್ವಾಳ (ದಕ್ಷಿಣ ಕನ್ನಡ): ಕಾಲೇಜಿಗೆ ತೆರಳಲು ಬಸ್ಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಬಸ್ ನಿಲ್ದಾಣದಲ್ಲೇ ಚೂರಿಯಿಂದ ದಾಳಿ ನಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಮೋಂತಿಮಾರು ಪಡ್ಪು ಬಸ್ ನಿಲ್ದಾಣದಲ್ಲಿ ಆತಂಕ ಸೃಷ್ಟಿಸಿದೆ.
ಪ್ರಕರಣದಲ್ಲಿ ಮಂಚಿ ನಿವಾಸಿ ಹಾಗೂ ದಿನಸಿ ಅಂಗಡಿ ವ್ಯಾಪಾರಿ ಮೊಹಮ್ಮದ್ ಜವ್ವಾರ್ (28) ಎಂಬಾತನ ವಿರುದ್ಧ ಕೊಲೆ ಯತ್ನದ ಆರೋಪ ಕೇಳಿಬಂದಿದೆ. ಬಸ್ಗಾಗಿ ಕಾಯುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯ ತಲೆ ಮತ್ತು ಕೈ ಭಾಗಕ್ಕೆ ಚೂರಿಯಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿ ನಡೆಯುತ್ತಿದ್ದಂತೆ ಅಲ್ಲಿದ್ದ ಸಾರ್ವಜನಿಕರು ಜೋರಾಗಿ ಕಿರುಚಿ ಆತಂಕ ವ್ಯಕ್ತಪಡಿಸಿದ್ದು, ಇದರಿಂದ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ನೇರವಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಆಸ್ಪತ್ರೆಗೆ ತೆರಳಿ ಗಾಯಾಳು ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಆರಂಭಿಸಿದ್ದಾರೆ. ವಿದ್ಯಾರ್ಥಿನಿಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಆಕೆ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ದಾಳಿಯ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆರೋಪಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆಯ ನಂತರವೇ ಘಟನೆಯ ನಿಖರ ಕಾರಣ ಬಹಿರಂಗವಾಗಲಿದೆ ಎಂದು ಬಂಟ್ವಾಳ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.



