HomeDharwadಪಡಿತರ ಅಕ್ಕಿ ಕಾಳಸಂತೆಗೆ ಬ್ರೇಕ್!

ಪಡಿತರ ಅಕ್ಕಿ ಕಾಳಸಂತೆಗೆ ಬ್ರೇಕ್!

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಧಾರವಾಡ: ಮಳೆಯಿಂದ ಅಥವಾ ಇತರೆ ಕಾರಣಗಳಿಂದ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡರೆ ಹೆಸ್ಕಾಂ ಅಧಿಕಾರಿಗಳು ತಕ್ಷಣ ಸಮಸ್ಯೆ ಬಗೆಹರಿಸಬೇಕು. ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಧಾರವಾಡ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕೆಪಿಟಿಸಿಎಲ್ (ಕೆಇಬಿ) ಸರ್ವೆ ಕಾರ್ಯ ಆರಂಭಗೊಂಡಿದ್ದು, ಬಾಡಿಗೆ ಮನೆಯಲ್ಲಿ ವಾಸಿಸುವವರು ಕೈಬರಹದ ಬಾಡಿಗೆ ಪತ್ರ ಹಾಗೂ ಆಧಾರ್ ಕಾರ್ಡ್ ಸಲ್ಲಿಸಿ ಗೃಹಜ್ಯೋತಿ ಯೋಜನೆಯ ಸೌಲಭ್ಯ ಪಡೆಯಬಹುದು ಎಂದು ತಿಳಿಸಿದರು. ಲೈನ್‌ಮನ್‌ಗಳು ಸುರಕ್ಷತಾ ಕಿಟ್ ಧರಿಸಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಯುವನಿಧಿ ಯೋಜನೆಯಡಿ ನಿರುದ್ಯೋಗಿ ಯುವಕರು ಮತ್ತು ಯುವತಿಯರಿಗೆ ಹೆಚ್ಚಿನ ಪ್ರಮಾಣದಲ್ಲಿ ತರಬೇತಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಕೋಚಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಯೋಜನೆ ಕುರಿತು ಮಾಹಿತಿ ನೀಡಬೇಕು. ಗ್ರಾಮ ಮಟ್ಟದಲ್ಲಿ ಸಭೆಗಳು, ಜಾಗೃತಿ ಕಾರ್ಯಕ್ರಮಗಳು ಹಾಗೂ ಮಾಹಿತಿ ಶಿಬಿರಗಳನ್ನು ಆಯೋಜಿಸಿ ಅರ್ಹ ಯುವಕರಿಗೆ ಯೋಜನೆಯ ಪ್ರಯೋಜನಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಹತೆ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆಯ ಮಾಹಿತಿಯನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು. ಮರಣ ಹೊಂದಿದ ಫಲಾನುಭವಿಗಳ ವಿವರಗಳನ್ನು ಅಂಗನವಾಡಿ ಕಾರ್ಯಕರ್ತೆಯರು ಪರಿಶೀಲಿಸಿ ಸಂಬಂಧಿತ ಅಧಿಕಾರಿಗಳಿಗೆ ಸಲ್ಲಿಸಬೇಕು. ಬಸ್ ನಿಲ್ದಾಣಗಳ ಶೌಚಾಲಯಗಳ ಸ್ವಚ್ಛತೆ ಪರಿಶೀಲಿಸಿ, ಅಸ್ವಚ್ಛತೆ ಕಂಡುಬಂದರೆ ಸಂಬಂಧಪಟ್ಟ ಸಿಬ್ಬಂದಿಗೆ ದಂಡ ವಿಧಿಸುವಂತೆ ಸೂಚಿಸಿದರು.

ಸರ್ಕಾರದ ನಿರ್ದೇಶನದಂತೆ ಎಲ್ಲ ಅನ್ನಭಾಗ್ಯ ನ್ಯಾಯಬೆಲೆ ಅಂಗಡಿಗಳಲ್ಲಿ ಮುಖ್ಯಮಂತ್ರಿ ಹಾಗೂ ಆಹಾರ ಸಚಿವರ ಭಾವಚಿತ್ರ, ಧಾನ್ಯಗಳ ದರಪಟ್ಟಿ, ಲಭ್ಯವಿರುವ ದಾಸ್ತಾನು ಮತ್ತು ವಿತರಣಾ ದಿನಾಂಕವನ್ನು ಸಾರ್ವಜನಿಕರಿಗೆ ಸ್ಪಷ್ಟವಾಗಿ ಪ್ರದರ್ಶಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯ ಮರಣ ಹೊಂದಿದ ಫಲಾನುಭವಿಗಳ ಖಾತೆಗೆ ಜಮೆಯಾಗಿರುವ ಹಣವನ್ನು ಸರ್ಕಾರಕ್ಕೆ ಮರಳಿ ವಸೂಲಿ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮರಣ ಹೊಂದಿದ ಫಲಾನುಭವಿಗಳ ಖಾತೆಯಿಂದ ಕುಟುಂಬದವರು ಎಟಿಎಂ ಮೂಲಕ ಹಣ ಪಡೆದಿದ್ದರೆ ಅದನ್ನು ಸರ್ಕಾರಕ್ಕೆ ಮರಳಿಸಬೇಕು. ಹಣ ಮರುಪಾವತಿಸದಿದ್ದರೆ ಮುಂದಿನ ಸರ್ಕಾರಿ ಸೌಲಭ್ಯಗಳನ್ನು ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮುರಗಯ್ಯಾ ವಿರಕ್ತಮಠ, ಶಾಂತಪ್ಪ ಎಸ್. ಅಕ್ಕಿ, ರೇಹಾನ್ ರಝಾ ಐನಾಪೂರಿ, ರತ್ನಾ ತೇಗೂರಮಠ, ಸುಧೀರ ಎಸ್. ಬೋಳಾರ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊಗಲಬಾವಿ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ವಿನಾಯಕ ಕುರುಬರ, ಬಸಪ್ಪ ಮಹಾಬಲೇಶ್ವರ ಬಾವಕಾರ, ಮಂಜುನಾಥ ಮಾಯಣ್ಣವರ, ವರ್ಧಮಾನ ಹಿರೇಗೌಡರ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

“ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಗ್ಯಾರಂಟಿ ಯೋಜನೆಗಳ ಸೌಲಭ್ಯ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.”

ಎಸ್.ಆರ್. ಪಾಟೀಲ

ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ

ಯುವನಿಧಿ ಯೋಜನೆಯಡಿ 12,448 ಅರ್ಜಿಗಳು ಸ್ವೀಕೃತವಾಗಿದ್ದು, 10,350 ಫಲಾನುಭವಿಗಳಿಗೆ ಡಿಬಿಟಿ ಮೂಲಕ ₹32,08,57,000 ಸಹಾಯಧನ ಜಮೆಯಾಗಿದೆ. ಶಕ್ತಿ ಯೋಜನೆ ಆರಂಭವಾದ ಬಳಿಕ ಇದುವರೆಗೆ 41,13,76,389 ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದು, ಸರ್ಕಾರ ₹907.77 ಕೋಟಿ ಬಿಡುಗಡೆ ಮಾಡಿದೆ. ಗೃಹಜ್ಯೋತಿ ಯೋಜನೆಯಡಿ 5,08,244 ಫಲಾನುಭವಿಗಳಿಗೆ ₹778.56 ಕೋಟಿ, ಗೃಹಲಕ್ಷ್ಮಿ ಯೋಜನೆಯಡಿ 3,77,912 ಫಲಾನುಭವಿಗಳಿಗೆ ₹2,194.80 ಕೋಟಿ ಹಾಗೂ ಅನ್ನಭಾಗ್ಯ ಯೋಜನೆಯಡಿ 3,75,996 ಫಲಾನುಭವಿಗಳಿಗೆ ₹362.51 ಕೋಟಿ ಬಿಡುಗಡೆ ಮಾಡಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img