ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬಿಎಲ್ಒ (ಬೂತ್ ಮಟ್ಟದ ಅಧಿಕಾರಿ) ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ಮೇಲೆ ಅನಗತ್ಯ ಒತ್ತಡ ಹೇರದೆ, ಅಗತ್ಯ ಸಹಕಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಲಕ್ಷ್ಮೇಶ್ವರ ಘಟಕದ ಪದಾಧಿಕಾರಿಗಳು ಸೋಮವಾರ ತಹಸೀಲ್ದಾರ್ ಧನಂಜಯ ಎಂ. ಅವರಿಗೆ ಮನವಿ ಸಲ್ಲಿಸಿದರು.
ಸಂಘದ ಅಧ್ಯಕ್ಷರಾದ ಗುರುರಾಜ ಹವಳದ, ಮಹದೇವಪ್ಪ ಭರಮಗೌಡರ ಹಾಗೂ ಕಾರ್ಯದರ್ಶಿಗಳಾದ ಎಂ.ಎ. ನದಾಫ್ ಮತ್ತು ಶ್ರೀಕಾಂತ ನಂದೆಣ್ಣವರ ಮಾತನಾಡಿ, ಚುನಾವಣೆ ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಜವಾಬ್ದಾರಿಗಳನ್ನು ಶಿಕ್ಷಕರು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯ ಜುಲೈ 29ರವರೆಗೆ ನಡೆಯುತ್ತಿದ್ದು, ಇದರ ಜೊತೆಗೆ ಶೈಕ್ಷಣಿಕ ಚಟುವಟಿಕೆಗಳ ಜವಾಬ್ದಾರಿಯೂ ಹೆಚ್ಚಾಗಿದೆ ಎಂದು ತಿಳಿಸಿದರು.
ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಬೋಧನೆಗೆ ಹೆಚ್ಚಿನ ಸಮಯ ಮೀಸಲಿಡಬೇಕಿದೆ. ಆದರೆ ವಿವಿಧ ಇಲಾಖೆಗಳ ಹೆಚ್ಚುವರಿ ಕರ್ತವ್ಯಗಳಿಂದ ಬೋಧನಾ ಕಾರ್ಯಕ್ಕೆ ಅಡಚಣೆಯಾಗುತ್ತಿದೆ. ಈಗಾಗಲೇ ಲಕ್ಷ್ಮೇಶ್ವರ ತಾಲೂಕಿನಲ್ಲಿ ಶಿಕ್ಷಕರ ಕೊರತೆ ಇರುವುದರಿಂದ ಮಕ್ಕಳ ಶಿಕ್ಷಣದ ಗುಣಮಟ್ಟದ ಮೇಲೂ ಪರಿಣಾಮ ಬೀರುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಹೀಗಾಗಿ ಬಿಎಲ್ಒ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಅನಗತ್ಯ ಒತ್ತಡ ಹೇರದೆ ಅಗತ್ಯ ಸಹಕಾರ ನೀಡುವಂತೆ ತಹಶೀಲ್ದಾರ್ಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಖಜಾಂಚಿ ಎಂ.ಡಿ. ವಾರದ, ರಾಜ್ಯ ಪರಿಷತ್ ಸದಸ್ಯ ಎ.ಬಿ. ಗೌಡರ, ನಿರ್ದೇಶಕರಾದ ಬಸವರಾಜ ಯರಗುಪ್ಪಿ, ಹನೀಫ್ ಶಿರಹಟ್ಟಿ, ಪ್ರಶಾಂತ ಸನದಿ, ಜಿಲ್ಲಾ ನಾಮನಿರ್ದೇಶಿತ ಸದಸ್ಯರಾದ ಎಂ.ಎಸ್. ಹಿರೇಮಠ ಹಾಗೂ ಎಂ.ಎಸ್. ಚಾಕಲಬ್ಬಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಚುನಾವಣೆ ಸೇರಿದಂತೆ ಎಲ್ಲ ಸರ್ಕಾರಿ ಜವಾಬ್ದಾರಿಗಳನ್ನು ಶಿಕ್ಷಕರು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ. ಶಿಕ್ಷಣಕ್ಕೂ ಧಕ್ಕೆಯಾಗದಂತೆ ಬಿಎಲ್ಒ ಕಾರ್ಯದಲ್ಲಿ ಸಹಕಾರ ನೀಡಬೇಕು.”
— ಕರ್ನಾಟಕ ರಾಜ್ಯ ನೌಕರರ ಸಂಘ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ



