ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಕೆಲವು ವಾರ್ಡ್ಗಳಲ್ಲಿ ಪರ್ಯಾಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ನಡೆಸಲು ರಾಜ್ಯ ಚುನಾವಣಾ ಆಯೋಗ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರ, ರಾಜ್ಯ ಚುನಾವಣಾ ಆಯೋಗ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿ ಪ್ರತಿವಾದಿಗಳಿಗೆ ನೋಟಿಸ್ ನೀಡಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿದೆ.
ಜಿಬಿಎ ವ್ಯಾಪ್ತಿಯ ಕೆಲವು ವಾರ್ಡ್ಗಳಲ್ಲಿ ಪರ್ಯಾಯ ಎಸ್ಐಆರ್ ನಡೆಸುವ ಕುರಿತು ರಾಜ್ಯ ಚುನಾವಣಾ ಆಯೋಗವು ಜೂನ್ 19ರಂದು ಹೊರಡಿಸಿದ್ದ ಆದೇಶವನ್ನು ರದ್ದುಪಡಿಸುವಂತೆ ಕೋರಿ ಎಂ. ವಿವೇಕ್ ಸೇರಿದಂತೆ ಐವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ರಾಜ್ಯ ಸರ್ಕಾರವು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ನ್ಯಾಯಾಲಯ ನೋಟಿಸ್ ನೀಡಿ ವಿಚಾರಣೆ ಮುಂದೂಡಿದೆ.
ಅರ್ಜಿಯಲ್ಲಿ ಏನಿದೆ?
ಅರ್ಜಿದಾರರ ಪ್ರಕಾರ, 2025ರ ಅಕ್ಟೋಬರ್ 27ರಂದು ಕೇಂದ್ರ ಚುನಾವಣಾ ಆಯೋಗ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ನಡೆಸುವುದಾಗಿ ಪ್ರಕಟಿಸಿತ್ತು. ಅದರಂತೆ 2026ರ ಜೂನ್ 16ರಂದು ರಾಜ್ಯದ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಅಂತಿಮಗೊಳಿಸಲಾಗಿತ್ತು.
ಆದರೆ, ಇದರ ಮೂರೇ ದಿನಗಳ ಬಳಿಕ ಜೂನ್ 19ರಂದು ರಾಜ್ಯ ಚುನಾವಣಾ ಆಯೋಗವು ಜಿಬಿಎ ವ್ಯಾಪ್ತಿಯ ಕೆಲವು ವಾರ್ಡ್ಗಳಲ್ಲಿ ಪ್ರತ್ಯೇಕ ಎಸ್ಐಆರ್ ನಡೆಸಲು ಆದೇಶ ಹೊರಡಿಸಿದೆ. ಇದೇ ವೇಳೆ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 26ರಿಂದ ಜಿಬಿಎ ಸೇರಿದಂತೆ ರಾಜ್ಯಾದ್ಯಂತ ಮನೆ-ಮನೆಗೆ ತೆರಳಿ ಎಸ್ಐಆರ್ ಸಮೀಕ್ಷೆಯೂ ಆರಂಭವಾಗಿದೆ.
ಒಂದೇ ಅವಧಿಯಲ್ಲಿ ಎರಡು ಪ್ರತ್ಯೇಕ ಎಸ್ಐಆರ್ ಪ್ರಕ್ರಿಯೆಗಳು ನಡೆಯುವುದರಿಂದ ಮತದಾರರಲ್ಲಿ ಗೊಂದಲ ಉಂಟಾಗುವ ಸಾಧ್ಯತೆ ಇದೆ. ಜೊತೆಗೆ ಇದು ಕೇಂದ್ರ ಚುನಾವಣಾ ಆಯೋಗದ ನಿರ್ದೇಶನಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದು, ರಾಜ್ಯ ಚುನಾವಣಾ ಆಯೋಗದ ಜೂನ್ 19ರ ಆದೇಶವನ್ನು ರದ್ದುಪಡಿಸುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.



