ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ವಿಜ್ಞಾನಿ ಡಾ. ಲತಾ ಅವರ ಮಾಹಿತಿ ಪ್ರಕಾರ, ಕರಾವಳಿ ಜಿಲ್ಲೆಗಳು, ಹಾಸನ, ಶಿವಮೊಗ್ಗ, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಈ ಭಾಗಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೂರು ದಿನಗಳ ಬಳಿಕ ಈ ಭಾಗಗಳಲ್ಲಿ ಮಳೆಯ ಪ್ರಮಾಣ ಹಂತ ಹಂತವಾಗಿ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಇಲಾಖೆ ತಿಳಿಸಿದೆ.
ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದೆ. ಮುಂದಿನ 10 ದಿನಗಳ ಕಾಲ ಈ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆ ಬಂದರೂ ಪ್ರಮಾಣ ಕಡಿಮೆ ಇರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.



